
ನವದೆಹಲಿ: ‘ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿಯೂ ಇಲ್ಲ. ಜನವರಿ ಹಾಗೂ ಫೆಬ್ರವರಿಯಲ್ಲೂ ಆಗುವುದಿಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ 2028ರಲ್ಲಿ ಕ್ರಾಂತಿ ಆಗಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಐದು ವರ್ಷ ಇರಬೇಕೆಂದು ಹೈಕಮಾಂಡ್ ಹೇಳಿದರೆ ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷ ಇರುತ್ತಾರೆ. 15 ವರ್ಷ ಇರಬೇಕು ಎಂದರೆ 15 ವರ್ಷ ಇರುತ್ತಾರೆ. ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿರಬೇಕು ಅಷ್ಟೇ’ ಎಂದು ಮಾರ್ಮಿಕವಾಗಿ ಹೇಳಿದರು.
‘ನವೆಂಬರ್ ಕ್ರಾಂತಿಯ ದಿನ ನಿಗದಿಯಾಗಿರುವ ಬಗ್ಗೆ ಯಾರೋ ಸುಮ್ಮನೆ ಬರೆದಿದ್ದಾರೆ. ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ಪಕ್ಷ ನಮಗೆ ನೀಡಿದೆ. ನಾವು ಆ ಕೆಲಸ ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ’ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ಪರಮಾಧಿಕಾರ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ’ ಎಂದು ಸ್ಪಷ್ಟಪಡಿಸಿದರು.
‘ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು (ಮಾಧ್ಯಮ). ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಮುಖ್ಯಮಂತ್ರಿಯವರು ಏನಾದರೂ ಹೇಳಿದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದ್ದೇವೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಗೆರೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ’ ಎಂದು ತಿಳಿಸಿದರು.
‘ಪಕ್ಷ ಸಂಘಟನೆ ವಿಚಾರವಾಗಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ಮಾಡುತ್ತೇನೆ. ಮತಗಳ್ಳತನ ವಿಚಾರವಾಗಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಸಭೆ ಮಾಡಿದ್ದೇವೆ’ ಎಂದರು.
ಸಂಪುಟ ಸೇರ್ಪಡೆಯ ಆಕಾಂಕ್ಷೆಯಲ್ಲಿ ಇರುವವರಿಗೆ ಏನು ಹೇಳುತ್ತೀರಾ ಎಂದು ಕೇಳಿದಾಗ, ‘ಅದೆಲ್ಲವನ್ನೂ ದೆಹಲಿ ನಾಯಕರು ಯಾವಾಗ, ಯಾವ ರೀತಿ ಮಾಡಬೇಕೋ ಮಾಡುತ್ತಾರೆ‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.