ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಶಿಸ್ತು ಸಮಿತಿ ಮಂಗಳವಾರ ಷೋಕಾಸ್ ನೋಟಿಸ್ ನೀಡಿದೆ. ಹತ್ತು ದಿನಗಳಲ್ಲಿ ಉತ್ತರ ನೀಡುವಂತೆಯೂ ಸೂಚಿಸಿದೆ.
‘ನನಗೆ ವಾಟ್ಸ್ ಆ್ಯಪ್ ಮೂಲಕ ನೋಟಿಸ್ ಸಿಕ್ಕಿದೆ. ಅದಕ್ಕೆ ಹತ್ತು ದಿನಗಳ ಒಳಗೆ ಉತ್ತರ ನೀಡುತ್ತೇನೆ’ ಎಂದು ಹರಿಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು. ಈ ನೋಟಿಸ್ ಅನ್ನು ಸಮಿತಿಯ ಸದಸ್ಯ ಕಾರ್ಯದರ್ಶಿ ತಾರಿಕ್ ಅನ್ವರ್ ಹೆಸರಿನಲ್ಲಿ ನೀಡಲಾಗಿದೆ. ನೋಟಿಸ್ ನೀಡಿರುವ ದಿನಾಂಕವನ್ನು 2013ರ ಅಕ್ಟೋಬರ್ 12 ಎಂದು ನಮೂದಿಸಲಾಗಿದೆ.
ಬೆಂಗಳೂರಿನಲ್ಲಿ ಶನಿವಾರ ನಡೆದ ಈಡಿಗ ಮತ್ತು ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯಲ್ಲಿ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಹೆಸರು ಹೇಳದೆಯೇ ಮಾತಿನ ಉದ್ದಕ್ಕೂ ಟೀಕಾಪ್ರಹಾರ ನಡೆಸಿದ್ದರು.
‘ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ನಿಮ್ಮ ವಿರುದ್ಧ ಕಾಂಗ್ರೆಸ್ ಅಧ್ಯಕ್ಷರಿಗೆ ದೂರು ಸಲ್ಲಿಕೆಯಾಗಿದೆ. ಸಮಾವೇಶದಲ್ಲಿ ಬಿಜೆಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡು ಮುಖ್ಯಮಂತ್ರಿ ಅವರ ವಿರುದ್ಧ ಟೀಕೆ ನಡೆಸಿದ್ದೀರಿ ಎಂದು ದೂರಲಾಗಿದೆ. ಈ ಪ್ರಕರಣವನ್ನು ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.