ಬೆಂಗಳೂರು: ಇಲ್ಲಿಯವರೆಗೆ ಹಿಂಸಾತ್ಮಕ ಭಯೋತ್ಪಾದನೆ ನಡೆಸುತ್ತಿದ್ದ ಆರ್ಎಸ್ಎಸ್, ಇದೀಗ ಸಾಂಸ್ಕೃತಿ ಭಯೋತ್ಪಾದನೆ ಆರಂಭಿಸಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸೊರಬ ತಾಲ್ಲೂಕಿನ ಆನವಟ್ಟಿಯ ವೀರಶೈವ ಕಲ್ಯಾಣ ಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ ಬಜರಂಗದಳ ಹಾಗೂ ಆರ್ಎಸ್ಎಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಹೀಗಾಗಿ ಅನಿವಾರ್ಯವಾಗಿ ನಾಟಕ ಪ್ರದರ್ಶನವನ್ನು ಅರ್ಧದಲ್ಲಿಯೇ ನಿಲ್ಲಿಸಲಾಗಿತ್ತು.
ಈ ಕುರಿತು ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಆರ್ಎಸ್ಎಸ್ ವಿರುದ್ಧ ಟ್ವಿಟರ್ನಲ್ಲಿ ಗುಡುಗಿದೆ.
'ದೇಶದಲ್ಲಿ ಹಿಂಸಾತ್ಮಕ ಭಯೋತ್ಪಾದನೆ ನಡೆಸುತ್ತಿದ್ದ ಆರ್ಎಸ್ಎಸ್ ಈಗ ಸಾಂಸ್ಕೃತಿಕ ಭಯೋತ್ಪಾದನೆಯನ್ನು ಶುರುವಿಟ್ಟುಕೊಂಡಿದೆ.ಪಠ್ಯಪುಸ್ತಕಗಳಿಂದ ಹಿಡಿದು ರಂಗಭೂಮಿವರೆಗೂ ಆ ಭಯೋತ್ಪಾದನೆಯನ್ನು ಸ್ಥಾಪಿಸುತ್ತಿದೆ' ಎಂದು ಆರೋಪಿಸಿದೆ. ಮುಂದುವರಿದು, 'ಅನವಟ್ಟಿಯಲ್ಲಿ ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಸಂಘ ಪರಿವಾರದ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಗೃಹ ಸಚಿವ ಆರಗ ಜ್ಞಾನೆಂದ್ರ ಅವರನ್ನು ಟ್ಯಾಗ್ ಮಾಡಿ ಆಗ್ರಹಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.