ADVERTISEMENT

ಕೋವಿಡ್ ಲಸಿಕೆಗೆ ₹‌ 100 ಕೋಟಿ ನೀಡಲು ಕಾಂಗ್ರೆಸ್ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 14 ಮೇ 2021, 9:29 IST
Last Updated 14 ಮೇ 2021, 9:29 IST
   

ಬೆಂಗಳೂರು: ಪಕ್ಷದ ಶಾಸಕರು ಮತ್ತು ಸಂಸದರ‌ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿ ಸೇರಿದಂತೆ ₹ 100 ಕೋಟಿಯನ್ನು ಕೋವಿಡ್ ಲಸಿಕೆ ಖರೀದಿಗಾಗಿ ಸರ್ಕಾರಕ್ಕೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಕಟಿಸಿದರು.

ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ₹ 1 ಕೋಟಿ ಮೊತ್ತವನ್ನು ಲಸಿಕೆ ಖರೀದಿಗಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಡುತ್ತಾರೆ. ಉಳಿದ ಮೊತ್ತವನ್ನು ಕೆಪಿಸಿಸಿ ಭರಿಸಲಿದೆ. 95 ಶಾಸಕರು, ಸಂಸದರಿಂದ ತಲಾ 1 ಕೋಟಿ ಸೇರಿದಂತೆ ₹100 ಕೋಟಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯ ಸರ್ಕಾರ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕರೆದಿದೆ. ಅದರ ಬಗ್ಗೆ ಅನುಮಾನಗಳಿವೆ. ಈಗ‌ ಕಾಂಗ್ರೆಸ್ ಪಕ್ಷ ನೀಡುತ್ತಿರುವ‌ ಮೊತ್ತವನ್ನು ಪಾರದರ್ಶಕ ರೀತಿಯಲ್ಲಿ ಬಳಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ದೇಶದ ಜನರು ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಿದ್ದಾರೋ ಗೊತ್ತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಜನರ ನೆರವಿಗೆ ಬರುತ್ತಿಲ್ಲ ಎಂದು ಟೀಕಿಸಿದರು.

ಡಿ.ಕೆ. ಶಿವಕುಮಾರ್ ಮಾತನಾಡಿ, 'ಕೋವಿಡ್ ಎದುರಿಸಲು ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಸಹಾಯ ಹಸ್ತ ನೀಡುತ್ತಿದೆ. ಅದನ್ನು ಸರಿಯಾಗಿ ಬಳಸಿಕೊಂಡು ಜನರಿಗೆ ಲಸಿಕೆ ನೀಡಬೇಕು' ಎಂದರು.

ಲಾಕ್ ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಆಹಾರ ನೀಡುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ನ್ಯಾಯಾಲಯಗಳೂ ಈ ಮಾತು ಹೇಳಿದ್ದವು. ಆದರೆ, ರಾಜ್ಯ ಸರ್ಕಾರ ಆಹಾರ ಪಡೆಯಲು ಬರುವವರಿಗೆ ಗುರುತಿನ ಚೀಟಿ ಕೇಳುತ್ತಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.