ಬೆಂಗಳೂರು: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷ ಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ನಗರದಲ್ಲಿ ಶನಿವಾರ ಆರಂಭವಾದ ಬಿಜೆಪಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಘಟಕಗಳ ಪ್ರಮುಖರ ಸಭೆಗೂ ಮೊದಲು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಧಿಕಾರದಲ್ಲಿ ಇಲ್ಲದ ಸಂದರ್ಭದಲ್ಲಿ ಸಮಾಜಘಾತುಕ ಶಕ್ತಿಗಳ ಜತೆ ಕೈಜೋಡಿಸಿ ಗಲಭೆ ಸೃಷ್ಟಿಸುವುದು ಕಾಂಗ್ರೆಸ್ ಹವ್ಯಾಸ. ಈಗಲೂ ರಾಜ್ಯದಲ್ಲಿ ಅದೇ ಪ್ರಯತ್ನ ಮಾಡುತ್ತಿದೆ. ವಿರೋಧ ಪಕ್ಷವಾಗಿ ವಿಫಲವಾಗಿರುವ ಕಾಂಗ್ರೆಸ್, ಗಲಭೆ ಮಾಡಿಸಿ, ಬೆಂಕಿ ಹಚ್ಚಿ ಅಧಿಕಾರ ಪಡೆಯಬಹುದು ಎಂಬ ಕನಸು ಕಾಣುತ್ತಿದೆ ಎಂದರು.
ಡಿ.ಜೆ. ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ಇತ್ತು., ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣದ ಸಂದರ್ಭದಲ್ಲೂ ಗಲಭೆಗೆ ಪ್ರಯತ್ನ ಮಾಡಿತ್ತು. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಯತ್ನದ ಹಿಂದೆಯೂ ಕಾಂಗ್ರೆಸ್ ಇರುವುದು ಬಯಲಾಗಿದೆ ಎಂದು ಹೇಳಿದರು.
ಹಿಂದೆ ಭಯೋತ್ಪಾದನೆಗೆ ಬೆಂಬಲ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಉದಾಹರಣೆ ಇದೆ. ಭಿಂದ್ರನ್ ವಾಲೆಯನ್ನು ಸೃಷ್ಟಿಸಿದ್ದೇ ಆ ಪಕ್ಷ. ದಾವೂದ್ ಇಬ್ರಾಹಿಂಗೂ ಬೆಂಬಲ ನೀಡಿತ್ತು. ಈಗಲೂ ಕಾಂಗ್ರೆಸ್ ನಾಯಕರ ಮನಸ್ಥಿತಿ ಬದಲಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಪಡೆಯಲು ಪೂರಕವಾಗಿ ಪಕ್ಷ ಸಂಘಟನೆಗೆ ಪ್ರವಾಸ ಮಾಡಲಾಗುತ್ತಿದೆ. ಹಿಂದಿನ ಚುನಾವಣೆಗಳಲ್ಲಿ ಆಗಿರುವ ಅನುಭವದ ಆಧಾರದ ಮೇಲೆ ಹೊಸ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.