ADVERTISEMENT

ಲೋಕಸಭೆ ಸ್ಪೀಕರ್‌ ಭಾಷಣಕ್ಕೆ ಕಾಂಗ್ರೆಸ್‌ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 16:36 IST
Last Updated 23 ಸೆಪ್ಟೆಂಬರ್ 2021, 16:36 IST

ಬೆಂಗಳೂರು: ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ ಅವರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಶುಕ್ರವಾರ ಮಾಡಲಿರುವ ಭಾಷಣವನ್ನು ಕಾಂಗ್ರೆಸ್‌ ಬಹಿಷ್ಕರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಂಸದೀಯ ವ್ಯವಸ್ಥೆಯ ನಡವಳಿಕೆ ಪ್ರಕಾರ, ವಿಧಾನಸಭೆಯಲ್ಲಿ ಸದನದ ಸದಸ್ಯರ ಹೊರತಾಗಿ ರಾಷ್ಟ್ರಪತಿ ಮತ್ತು ರಾಜ್ಯಪಾಲರು ಮಾತ್ರ ಮಾತನಾಡಬಹುದು. ಆದರೆ, ಬಿಜೆಪಿ ಸರ್ಕಾರ ಲೋಕಸಭೆಯ ಸ್ಪೀಕರ್‌ ಅವರನ್ನು ಭಾಷಣಕ್ಕೆ ಆಹ್ವಾನಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿಹಾಡಿದೆ’ ಎಂದರು.

ಈ ಕಾರ್ಯಕ್ರಮದ ಕುರಿತು ಸರ್ಕಾರವು ವಿರೋಧ ಪಕ್ಷದ ನಾಯಕರ ಜತೆ ಚರ್ಚೆಯನ್ನೇ ನಡೆಸಿಲ್ಲ. ಈ ರೀತಿಯ ನಡವಳಿಕೆಯ ಮೂಲಕ ಸಂಸದೀಯ ವ್ಯವಸ್ಥೆ ಕುಸಿಯುತ್ತಿದೆ. ಈ ಸಭೆಯಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ ಎಂದು ಹೇಳಿದರು.

ADVERTISEMENT

ಟಾಂಗಾ ಜಾಥಾ: ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಶುಕ್ರವಾರವೂ ಕಾಂಗ್ರೆಸ್‌ ಶಾಸಕರು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೂ ಕುದುರೆ ಗಾಡಿಯಲ್ಲಿ ಮೆರವಣಿಗೆಯಲ್ಲಿ ಬರಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.