ಬೆಂಗಳೂರು: ‘ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆಯ ಬಳಿಕ ಸಂವಿಧಾನದ ಪೀಠಿಕೆ ಓದಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಂವಿಧಾನ ಏಕತಾ ಸಮಿತಿ ಪದಾಧಿಕಾರಿಗಳು, ಸ್ವಾಮೀಜಿಗಳ ಜತೆ ಸಭೆ ನಡೆಸಿದರು. ಈ ವೇಳೆ ಏಕತಾ ಸಮಿತಿ ಪದಾಧಿಕಾರಿಗಳು ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಶಾಲಾ–ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಸಂವಿಧಾನದ ಬಗ್ಗೆ ತಜ್ಞರಿಂದ ಪಾಠ ಮಾಡಿಸುವುದು ಸೂಕ್ತ ಎಂದು ಸಮಿತಿ ಸಲಹೆ ನೀಡಿತು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.
ಎಲ್ಲ ಶಾಲೆಗಳಲ್ಲೂ ಸಂವಿಧಾನ ದಿನ ಆಚರಿಸುವ ಸಂಬಂಧ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ, ಅದರ ಜತೆಗೆ ಕಳುಹಿಸಿದ್ದ ಕೈಪಿಡಿಯಲ್ಲಿ ‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ’ ಎಂದು ಉಲ್ಲೇಖಿಸಿತ್ತು. ‘ಈ ರೀತಿ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು’ ಎಂದು ಯಡಿಯೂರಪ್ಪ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.