ಬೆಳಗಾವಿ: ಗ್ರಾಹಕರ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನವಿಗಳು ಸಲ್ಲಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಖಾಯಂ ಸಂಚಾರಿ ಪೀಠ ಸ್ಥಾಪಿಸಲು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸಮ್ಮತಿ ನೀಡಿದೆ.
ಬೆಳಗಾವಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ಪ್ರತಿ ತಿಂಗಳು 250ರಿಂದ 300 ಪ್ರಕರಣಗಳು ದಾಖಲಾಗುತ್ತಿವೆ. ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ನೂರಾರು ಮೇಲ್ಮನವಿ ಪ್ರಕರಣಗಳು ಬೆಂಗಳೂರಿನಲ್ಲಿರುವ ಆಯೋಗಕ್ಕೆ ಸಲ್ಲಿಕೆಯಾಗುತ್ತಿವೆ. ಮೇಲ್ಮನವಿ ಸಲ್ಲಿಸಲು ದೂರದ ಬೆಂಗಳೂರಿಗೆ ಹೋಗಿಬರುವುದು ಸ್ಥಳೀಯರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಇದರ ಜೊತೆ ಸಮಯ ಕೂಡ ವ್ಯರ್ಥವಾಗುತ್ತಿದೆ. ಇದನ್ನು ತಡೆಯುವುದಕ್ಕಾಗಿ ಬೆಳಗಾವಿಯಲ್ಲಿ ಖಾಯಂ ಸಂಚಾರಿ ಪೀಠ ಸ್ಥಾಪಿಸಬೇಕು ಎಂದು ಆಯೋಗ ಹೇಳಿದೆ.
ಪೀಠ ಸ್ಥಾಪನೆಗಾಗಿ ಅಗತ್ಯವಿರುವ ಶಿರಸ್ತೇದಾರರ್ (1), ಶೀಘ್ರಲಿಪಿಗಾರರು (2), ಪ್ರಥಮ ದರ್ಜೆ ಸಹಾಯಕರು (1), ದ್ವಿತೀಯ ದರ್ಜೆ ಸಹಾಯಕರು (1) ಹಾಗೂ ಗ್ರೂಪ್ ಡಿ ನೌಕರರ (2) ಹುದ್ದೆಗಳನ್ನು ಮಂಜೂರು ಮಾಡಬೇಕೆಂದು ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ ಎಂದು ಆಯೋಗದ ರಿಜಿಸ್ಟ್ರಾರ್ ಎನ್.ರಾಜು ಅವರು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.