ADVERTISEMENT

ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 19:55 IST
Last Updated 7 ಆಗಸ್ಟ್ 2021, 19:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮನೆಗಳು ಪೂರ್ಣ ಹಾಗೂ 6 ಮನೆಗಳು ಭಾಗಶಃ ಹಾನಿಯಾಗಿವೆ. 46 ವಿದ್ಯುತ್‌ ಕಂಬಗಳು ಜಖಂಗೊಂಡಿವೆ.

ಸುಬ್ರಹ್ಮಣ್ಯ ಬಳಿ ಯಡಕುಮೇರಿಯಲ್ಲಿಶುಕ್ರವಾರ ರಾತ್ರಿ ರೈಲು ಹಳಿಗೆ ಬಂಡೆ ಉರುಳಿದ್ದು, ಅರ್ಧ ಗಂಟೆ ರೈಲು ಸಂಚಾರ ವಿಳಂಬವಾಗಿತ್ತು. ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ, ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಶೃಂಗೇರಿ ತಾಲ್ಲೂಕು ಬೆಟ್ಟಗೆರೆಯಲ್ಲಿ ಪ್ರಯಾಣಿಕರ ತಂಗುದಾಣ ಕುಸಿದಿದೆ. ತುಂಗಾ,ಭದ್ರಾ, ಹೇಮಾವತಿ ನದಿಗಳಲ್ಲಿ ಹರಿವು ಏರಿದೆ.

ADVERTISEMENT

ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕಾರವಾರ ಸೇರಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಯಿತು. ಅಂಕೋಲಾ, ಹೊನ್ನಾವರ, ಭಟ್ಕಳ, ಮುಂಡಗೋಡ, ಶಿರಸಿ ಭಾಗದಲ್ಲಿ ಮಳೆಯಾಗಿದೆ.

ಶಿವಮೊಗ್ಗ ವರದಿ: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 14.27 ಮಿ.ಮೀ ಸರಾಸರಿ ಮಳೆಯಾಗಿದೆ.

ಕೊಡಗು ವರದಿ: ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಕಕ್ಕಬ್ಬೆ, ಚೇರಂಬಾಣೆ, ಬಕ್ಕ, ಭಾಗಮಂಡಲ ಭಾಗದಲ್ಲಿ ಶನಿವಾರ ದಿನವಿಡೀ ಮಳೆಯಾಗಿದೆ. ನಿರಂತರ ಮಳೆಯಿಂದ ಮುಕ್ಕೋಡ್ಲು- ಹೆಮ್ಮೆತ್ತಾಳು ಸಣ್ಣ ಸೇತುವೆ ಕುಸಿದಿದೆ.

ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಮೈಸೂರು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.