ADVERTISEMENT

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ; ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತನ ಬಂಧನ

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 14:13 IST
Last Updated 10 ಜನವರಿ 2025, 14:13 IST
<div class="paragraphs"><p>ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ರಾಜು ಕಪನೂರ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಸಂಜೆ ಬಂಧಿಸಿ ಕರೆದೊಯ್ದರು</p></div>

ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ರಾಜು ಕಪನೂರ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಸಂಜೆ ಬಂಧಿಸಿ ಕರೆದೊಯ್ದರು

   

ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ

ಬೀದರ್‌: ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕಲಬುರಗಿಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರ ಸೇರಿದಂತೆ ಐವರನ್ನು ಶುಕ್ರವಾರ ಸಂಜೆ ಬಂಧಿಸಿದರು.

ADVERTISEMENT

ಘಟನೆ ನಡೆದ 17 ದಿನಗಳ ನಂತರ ಪ್ರಕರಣದ ಐವರು ಆರೋಪಿಗಳನ್ನು ಮೊದಲ ಬಾರಿಗೆ ವಿಚಾರಣೆಗೆ ಒಳಪಡಿಸಿ ಬಂಧಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಗೋರಖನಾಥ ಸಜ್ಜನ್‌, ಬ್ಲಾಕ್‌ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ನಂದಕುಮಾರ ನಾಗಭುಜಂಗೆ, ಕಲಬುರಗಿಯ ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಪಾಟೀಲ ಹಾಗೂ ಸತೀಶ ರತ್ನಾಕರ ದುಬಲಗುಂಡಿ ಅವರನ್ನು ಬಂಧಿಸಿ, ನಗರದ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಎದುರು ಹಾಜರುಪಡಿಸಿದರು.

ಆರೋಪಿಗಳನ್ನು ಐದು ದಿನ ಸಿಐಡಿ ಕಸ್ಟಡಿಗೆ ನೀಡಲು ಆದೇಶಿಸಲಾಗಿದೆ. ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಮೂರ್ತಿ ಅವರು ಆರೋಪಿಗಳ ಪರವಕೀಲರು ಹಾಗೂ ಸಿಐಡಿ ವಕೀಲರ ವಾದ–ಪ್ರತಿವಾದ ಆಲಿಸಿದ ಬಳಿಕ ಸಿಐಡಿ ಕಸ್ಟಡಿಗೆ ವಹಿಸಿ ಆದೇಶಿಸಿದರು.

ನಗರದ ಬೀದರ್‌ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ತಾತ್ಕಾಲಿಕವಾಗಿ ತೆಗೆದಿರುವ ಸಿಐಡಿ ಕಚೇರಿಯಲ್ಲಿ ಡಿಐಜಿಪಿ ಶಾಂತನು ಸಿನ್ಹಾ ಅವರ ಎದುರು ಐದೂ ಜನ ವಿಚಾರಣೆಗೆ ಹಾಜರಾದರು. ಅವರ ಹೇಳಿಕೆ ದಾಖಲಿಸಿದ ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ಬಳಿಕ ನೇರವಾಗಿ ನ್ಯಾಯಾಲಯಕ್ಕೆ ಕರೆದೊಯ್ದರು. ಈಗಾಗಲೇ ಸಚಿನ್‌ ಕುಟುಂಬದವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್‌ ಪಾಂಚಾಳ್‌ ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ರಾಜು ಕಪನೂರ ಸೇರಿದಂತೆ ಎಂಟು ಜನರ ಹೆಸರು ಉಲ್ಲೇಖಿಸಿದ್ದರು. ಸಚಿನ್‌ ಕುಟುಂಬದವರು ನೀಡಿದ ದೂರಿನ ಮೇರೆಗೆ ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ರಾಜು ಕಪನೂರ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಸಂಜೆ ಬಂಧಿಸಿ ಕರೆದೊಯ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.