ADVERTISEMENT

ಬಳ್ಳಾರಿ | ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಸೋಂಕು

ಪರೀಕ್ಷಾ ಕೇಂದ್ರ ‌ಸ್ಯಾನಿಟೈಸ್, ಆತಂಕ ಬೇಡ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 19:31 IST
Last Updated 28 ಜೂನ್ 2020, 19:31 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಒಬ್ಬ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ನಗರದ ವಿಸ್ಡಮ್ ಲ್ಯಾಂಡ್ ಶಾಲೆಯ ಪರೀಕ್ಷಾ ಕೇಂದ್ರವನ್ನು ಸಂಪೂರ್ಣ ‌ಸ್ಯಾನಿಟೈಸ್ ಮಾಡಲಾಗಿದೆ.

ವಿದ್ಯಾರ್ಥಿ ಪರೀಕ್ಷೆ ‌ಬರೆದ ಕೊಠಡಿಯಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಒದಗಿಸಿ ಪ್ರತಿ ಬೆಂಚ್‌ಗೆ ಒಬ್ಬರಂತೆ ಮಾತ್ರ ಕುಳ್ಳಿರಿಸಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಡಿ.ಸಿ ಎಸ್‌.ಎಸ್‌.ನಕುಲ್‌ ತಿಳಿಸಿದ್ದಾರೆ.

‘ಈ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದ್ದು, ಸೋಮವಾರ ಬೆಳಿಗ್ಗೆ‌ ಇನ್ನೊಂದು‌ ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ’ ಎಂದಿದ್ದಾರೆ.

ADVERTISEMENT

‘ಜೂನ್‌ 25ರಂದು ಇಂಗ್ಲಿಷ್ ಪರೀಕ್ಷೆ ಬರೆದು ಕಪ್ಪಗಲ್ಲು ಗ್ರಾಮಕ್ಕೆ ಮೂವರು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ ಮೂವರನ್ನೂ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರಿಗೆ ಮೂಳೆ ಮುರಿದಿದ್ದ ಕಾರಣ ಒಳರೋಗಿಗಳಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಬ್ಬರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾ ಗಿತ್ತು. ಅವರಲ್ಲಿ ಒಬ್ಬನಿಗೆ ಸೋಂಕು ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಮಾರ್ಗಸೂಚಿಗಳ‌ ಅನುಸಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಗಾಯಗೊಳ್ಳದ ಮೂರನೇ ವಿದ್ಯಾರ್ಥಿಯು 27ರಂದು ಪರೀಕ್ಷೆಗೆ ಹಾಜರಾಗಿದ್ದ. ಮೂವರೂ ಮುಂದಿನ ದಿನಗಳಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಾಗುವುದಿಲ್ಲ. ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗುವುದು’ ಎಂದಿದ್ದಾರೆ.

ಆರೋಗ್ಯ ನಿರೀಕ್ಷಕಗೆ ಕೋವಿಡ್‌ 19
ಸಂಡೂರು:
45 ವರ್ಷದ ಆರೋಗ್ಯ ನಿರೀಕ್ಷಕರಿಗೆ ಭಾನುವಾರ ಕೋವಿಡ್ 19 ದೃಢಪಟ್ಟಿದೆ.

‘ಬೆಳಿಗ್ಗೆ ಸ್ವಲ್ಪ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಎರಡು ದಿನಗಳ ಮುಂಚೆಯೇ ಅವರ ಗಂಟಲು ದ್ರವವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ‘ ಎಂದು ತಹಶೀಲ್ದಾರ್ ಎಚ್.ಜೆ. ರಶ್ಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.