ADVERTISEMENT

Covid-19 Karnataka Update: ಸೋಂಕಿತರ ಸಂಖ್ಯೆ 9.29 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 20:20 IST
Last Updated 13 ಜನವರಿ 2021, 20:20 IST
ಶಾಲೆಯೊಂದರಲ್ಲಿ ಸೋಂಕು ನಿವಾರಕ ಸಿಂಪಡಿಸಿ ಮೇಜು ಸ್ವಚ್ಛಗೊಳಿಸುತ್ತಿರುವುದು
ಶಾಲೆಯೊಂದರಲ್ಲಿ ಸೋಂಕು ನಿವಾರಕ ಸಿಂಪಡಿಸಿ ಮೇಜು ಸ್ವಚ್ಛಗೊಳಿಸುತ್ತಿರುವುದು   

ಬೆಂಗಳೂರು: ರಾಜ್ಯದಲ್ಲಿ ಬುಧವಾರ 746 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.29 ಲಕ್ಷ ದಾಟಿದೆ.

ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,152ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 756 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 9.08 ಲಕ್ಷಕ್ಕೆ ತಲುಪಿದೆ. 8,887 ಮಂದಿ ಕೋವಿಡ್‌ ಪೀಡಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಸದ್ಯ 193 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಒಂದೇ ದಿನ 1.06 ಲಕ್ಷ ಆರ್‌ಟಿ–ಪಿಸಿಆರ್ ಸೇರಿದಂತೆ 1.13 ಲಕ್ಷ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಈ ತಿಂಗಳು 13 ದಿನಗಳಲ್ಲಿ 14 ಲಕ್ಷ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ
1.55 ಕೋಟಿ ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಕಳೆದ 14 ದಿನಗಳ ಅವಧಿಯಲ್ಲಿ 55 ಸಾವಿರ ನೇರ ಸಂಪರ್ಕಿತರು ಹಾಗೂ 61 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ. ಕಳೆದ 7 ದಿನಗಳ ಅವಧಿಯಲ್ಲಿ 23,419 ಮಂದಿ ಮನೆ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 426 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.93 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 31 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,894ಕ್ಕೆ ತಲುಪಿದೆ. ಚಿಕ್ಕಬಳ್ಳಾಪುರದಲ್ಲಿ 39, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ತಲಾ 24, ದಕ್ಷಿಣ ಕನ್ನಡದಲ್ಲಿ 20, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಹಾಸನದಲ್ಲಿ ತಲಾ 18 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 2 ಹಾಗೂ ಉತ್ತರ ಕನ್ನಡದಲ್ಲಿ ಒಂದು ಮರಣ ಪ್ರಕರಣ ಹೊಸದಾಗಿ ವರದಿಯಾಗಿದೆ.

ಚಿತ್ರನಟಿಗೆ ರೂಪಾಂತರ ವೈರಾಣು

ನಗರದಲ್ಲಿ ಮಂಗಳವಾರ ದೃಢಪಟ್ಟಿದ್ದ ಎರಡು ಕೋವಿಡ್ ರೂಪಾಂತರ ಪ್ರಕರಣದಲ್ಲಿ ಒಬ್ಬರು ಮಲಯಾಳಂ ನಟಿಯಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದೆ.

39 ವರ್ಷದ ಅವರು ಮಲಯಾಳಂನಲ್ಲಿ 100ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ಬ್ರಿಟನ್‌ನಿಂದ ಇಲ್ಲಿಗೆ ಬರುವ ಮೊದಲು ಕೋವಿಡ್‌ಪರೀಕ್ಷೆಯ ವರದಿಯನ್ನು ತಂದಿರಲಿಲ್ಲ. ಸೋಮವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಕೋವಿಡ್‌ ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರು ಕೋವಿಡ್‌ ಪೀಡಿತರಾಗಿರುವುದು ದೃಢಪಟ್ಟಿತು.

ಅವರ ಮಾದರಿಯನ್ನು ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ವರದಿಯಲ್ಲಿ ರೂಪಾಂತರ ವೈರಾಣು ಇರುವುದು ದೃಢಪಟ್ಟಿದೆ. ಅವರು ಬೆಂಗಳೂರಿನಿಂದ ಕೇರಳಕ್ಕೆ ಪ್ರಯಾಣ ಬೆಳೆಸುವವರಿದ್ದರು.

‘ಅವರಲ್ಲಿ ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಸರ್ಕಾರದ ನಿಯಮಾವಳಿ ಪ್ರಕಾರ 14 ದಿನಗಳು ಇಲ್ಲಿ ಇರಬೇಕಾಗುತ್ತದೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.