ಚಿತ್ರದುರ್ಗ: ಕೋವಿಡ್-19 ಪೀಡಿತರೊಂದಿಗೆ ಪರೋಕ್ಷ ಸಂಪರ್ಕ ಹೊಂದಿದ ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಕೊರೊನಾ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈವರೆಗೆ ಕೋವಿಡ್-19 ಪೀಡಿತರ ನೇರ ಸಂಪರ್ಕ ಹೊಂದಿದವರ ಗಂಟಲು ದ್ರವ ಮತ್ತು ರಕ್ತದ ಮಾದರಿಗಳನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಪರೋಕ್ಷ ಸಂಪರ್ಕ ಹೊಂದಿದವರ ಮೇಲೆ ನಿಗಾ ಇಡಲಾಗುತ್ತಿತ್ತು. ಈಗ ಅನುಮಾನ ಇರುವ ಪ್ರತಿಯೊಬ್ಬರ ಆರೋಗ್ಯ ಪರೀಕ್ಷೆಗೆ ಇಲಾಖೆ ಸಜ್ಜಾಗಿದೆ ಎಂದರು.
ಕೊರೊನಾ ಸೋಂಕು ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲಿ ಕೋವಿಡ್-19 ಪೀಡಿತರ ಸಂಖ್ಯೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿತ್ತು. ಈಗ ದೇಶದಲ್ಲಿ 12ನೇ ಸ್ಥಾನದಲ್ಲಿದ್ದು, ಬಹುತೇಕ ನಿಯಂತ್ರಣಕ್ಕೆ ಬಂದಿದೆ ಎಂಬ ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ 247 ಸೋಂಕಿತರಿದ್ದು, 8 ಸಾವು ಸಂಭವಿಸಿದೆ. 60 ಜನ ಗುಣಮುಖರಾಗಿದ್ದಾರೆ ಎಂದು ಹೇಳಿದರು.
ಕೋವಿಡ್- 19 ಸೋಂಕು ಪತ್ತೆಹಚ್ಚಲು ರಾಜ್ಯದಲ್ಲಿ 16 ಪ್ರಯೋಗಾಲಯಗಳಿವೆ. ಅಗತ್ಯ ಬಿದ್ದರೆ ಮತ್ತಷ್ಟು ಲ್ಯಾಬ್ ಗಳನ್ನು ತೆರೆಯುತ್ತೇವೆ. ಎನ್95 ಮಾಸ್ಕ್ ಪ್ರತಿಯೊಬ್ಬರೂ ಬಳಸುವ ಅಗತ್ಯ ಇಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರು ಮಾತ್ರ ಬಳಸಿದರೆ ಸಾಕು. ಉಳಿದವರು ಬಟ್ಟೆಯ ಮಾಸ್ಕ್ ಬಳಸಿದರೆ ಸಾಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.