ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆದವರಲ್ಲಿ ಮತ್ತೆ ಒಬ್ಬರಿಗೆ ತೀವ್ರ ಹಾಗೂ ಮೂವರಿಗೆ ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿರುವುದು ಶುಕ್ರವಾರ ದೃಢಪಟ್ಟಿದೆ. ಇವರಲ್ಲಿ ಚಿಕ್ಕಬಳ್ಳಾಪುರದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಗೆ ಜಯದೇವ ಹೃದ್ರೋಗ ಸಂಸ್ಥೆಗೆ ದಾಖಲಾಗಿದ್ದ 56 ವರ್ಷದ ವ್ಯಕ್ತಿ, ಗುರುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಅವರಿಗೆ ಶುಕ್ರವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆಯೇ ಮೃತಪಟ್ಟಿದ್ದಾರೆ. ಅವರು ಈ ಹಿಂದೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಅವರ ಸಾವಿಗೆ ಲಸಿಕೆಯ ಅಡ್ಡ ಪರಿಣಾಮ ಕಾರಣವೇ ಅಥವಾ ಬೇರೆ ಸಮಸ್ಯೆಯೇ ಎನ್ನುವುದರ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಯಚೂರಿನ ಅಂಗನವಾಡಿ ಕಾರ್ಯಕರ್ತೆ ಜ.20ರಂದು ಲಸಿಕೆ ಪಡೆದುಕೊಂಡಿದ್ದರು. ಜ.27ರ ಬಳಿಕೆ ಅವರಿಗೆ ಮೈಕೈ ನೋವು ಕಾಣಿಸಿಕೊಂಡಿತ್ತು. ಫೆ.15ರ ಬಳಿಕ ಜ್ವರ, ಹೊಟ್ಟೆನೋವು ಸೇರಿದಂತೆ ವಿವಿಧ ಸಮಸ್ಯೆಗಳು ಎದುರಾಗಿದ್ದು, ಅವರನ್ನು ನಿಮ್ಹಾನ್ಸ್ಗೆ ದಾಖಲಿಸಲಾಗಿದೆ. ಮೈಸೂರಿನಲ್ಲಿ 40 ವರ್ಷದ ವ್ಯಕ್ತಿಗೆ ಕೈಕಾಲುಗಳಲ್ಲಿ ನೋವು ಕಾಣಿಸಿಕೊಂಡಿದ್ದು, ಅವರಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಸೋಂಕು: 5 ಸಾವು
ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ಕು ಮಂದಿ ಕೊಡಗಿನಲ್ಲಿ ಒಬ್ಬರು ಮೃತಪಟ್ಟಿರುವುದು ಶುಕ್ರವಾರ ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,287ಕ್ಕೆ ತಲುಪಿದೆ. ರಾಜ್ಯದಲ್ಲಿ ಹೊಸದಾಗಿ 386 ಸೋಂಕು ಪ್ರಕರಣಗಳು ದೃಢಪಟ್ಟಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.