ADVERTISEMENT

ಸೋಂಕಿತರ ಪರೀಕ್ಷೆ ಪ್ರಮಾಣ ಹೆಚ್ಚಿಸಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 1:51 IST
Last Updated 18 ಏಪ್ರಿಲ್ 2020, 1:51 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸೋಂಕಿತರ ಪರೀಕ್ಷೆ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶುಕ್ರವಾರ ಇಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಂಕು ಕಂಡುಬಂದ ಸಂದರ್ಭದಲ್ಲೇ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ನಾವು ಆಗಲೇ ಸರ್ಕಾರಕ್ಕೆ ಸಲಹೆ ನೀಡಿದ್ದೆವು. ವಿಧಾನಮಂಡಲ ಅಧಿವೇಶನ ಮುಂದೂಡಿ ಕೊರೊನಾ ಸೋಂಕಿನತ್ತ ಗಮನ ಹರಿಸಿ ಎಂದು ಹೇಳಿದ್ದೆವು. ಸರ್ಕಾರ ವಿಳಂಬ ಮಾಡಿದ್ದರಿಂದಲೇ ಪರಿಸ್ಥಿತಿ ಈ ಹಂತ ತಲುಪಿದೆ’ ಎಂದರು.

‘ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ. ವಿದೇಶದಿಂದ ಬಂದವರ ಸಂಖ್ಯೆ ಅಲ್ಲಿ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ನಮ್ಮಲ್ಲಿ ಹೆಚ್ಚಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಬೇಕು’ ಎಂದರು.

ADVERTISEMENT

‘ನಂಜನಗೂಡಿನ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಚೀನಾದ ಕಂಟೈನರ್‌ನಿಂದ ಸೋಂಕು ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಪರೀಕ್ಷಾ ವರದಿಯಲ್ಲಿ ನೆಗಟಿವ್ ಬಂದಿದೆ. ಆರಂಭದಲ್ಲೇ ಅಲ್ಲಿ ಸರಿಯಾದ ರೀತಿಯಲ್ಲಿ ಕ್ವಾರಂಟೈನ್ ಮಾಡಿದ್ದರೆ ಸೋಂಕು ವೇಗವಾಗಿ ಹರಡುತ್ತಿರಲಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಹಣ್ಣು, ತರಕಾರಿ ಬೆಳೆಯುತ್ತಿರುವ ರೈತರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಬೆಳೆದಿದ್ದನ್ನು ಖರೀದಿ ಮಾಡುವವರಿಲ್ಲ. ಅವರನ್ನು ಕೇಳುವವರಿಲ್ಲ. ಸರ್ಕಾರವೇ ಖರೀದಿ ಮಾಡಲಿ ಎಂದು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಪರೀಕ್ಷೆಗೆ ಕಿಟ್‍ಗಳೂ ಸರಬರಾಜು ಆಗು
ತ್ತಿಲ್ಲ. ಆ ಬಗ್ಗೆ ಸರ್ಕಾರ ತುರ್ತಾಗಿ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.

51 ಪ್ರಶ್ನೆ ಕೇಳಿದ್ದರು

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಪತ್ರ ಬರೆದು 51 ಪ್ರಶ್ನೆಗಳನ್ನು ಕೇಳಿದ್ದರು. ಹೀಗಾಗಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.