ಬೆಂಗಳೂರು: ಪತ್ನಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ, ತನಗೂ ಸೋಂಕು ತಗುಲಬಹುದು ಎಂಬ ಕಾರಣದಿಂದ ಪತಿ ಪರಾರಿಯಾಗಿದ್ದಾನೆ. ಪತ್ನಿಯ ಅಂತ್ಯಸಂಸ್ಕಾರಕ್ಕೂ ಬಂದಿಲ್ಲ.
ನಗರದ ಶಂಕರಮಠ ವಾರ್ಡ್ನ ಜೆ.ಸಿ.ನಗರದಲ್ಲಿ ಈ ದಂಪತಿ ವಾಸವಾಗಿದ್ದರು. ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಗಂಡ ಕಾರು ಚಾಲಕನಾಗಿದ್ದರೆ, ಪತ್ನಿ ಒರಾಯನ್ ಮಾಲ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಆದಿಚುಂಚನಗಿರಿ ಆಸ್ಪತ್ರೆಗೆ ಮಹಿಳೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು.
'ದಂಪತಿಯು ನಮ್ಮ ಮನೆಯಲ್ಲಿಯೇ ಬಾಡಿಗೆಗೆ ಇದ್ದರು. ಪತ್ನಿಗೆ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಪತಿ ಪರಾರಿಯಾಗಿದ್ದಾನೆ. ಅವನು ನಾಪತ್ತೆಯಾದ ರಾತ್ರಿಯೇ ಪತ್ನಿ ಅಸುನೀಗಿದ್ದಾರೆ. ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದಾನೆ' ಎಂದು ಪಾಲಿಕೆ ಸದಸ್ಯ ಎಂ.ಶಿವರಾಜ್ ಹೇಳಿದರು.
'ಪೊಲೀಸರಿಗೆ ದೂರು ನೀಡಲಾಗಿದೆ. ಮಹಿಳೆಯ ಶವವನ್ನು ಆಂಬುಲೆನ್ಸ್ನಲ್ಲಿ ತೆಗೆದುಕೊಂಡು ಹೋಗಿ ಕೋವಿಡ್ ಮಾರ್ಗಸೂಚಿ ಅನ್ವಯ ಅಂತ್ಯಸಂಸ್ಕಾರ ಮಾಡಲಾಗಿದೆ' ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.