ADVERTISEMENT

Covid 19 Karnataka Update: 4 ಜಿಲ್ಲೆಗಳಲ್ಲಷ್ಟೇ ನೂರಕ್ಕಿಂತ ಹೆಚ್ಚು ಕೇಸ್‌ಗಳು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 15:05 IST
Last Updated 25 ಆಗಸ್ಟ್ 2021, 15:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಬುಧವಾರ ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆಲ್ಲ ಜಿಲ್ಲೆಗಳಲ್ಲಿ ಕೋವಿಡ್‌ 19 ಸೋಂಕು ಪ್ರಕರಣಗಳು ನೂರರ ಗಡಿ ದಾಟಿಲ್ಲ. ಮೈಸೂರಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ 102ಕ್ಕೆ ಇಳಿಕೆಯಾಗಿದೆ. ಇದುವರೆಗೆ ಪ್ರತಿದಿನ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದ ಹಾಸನದಲ್ಲಿ ಬುಧವಾರ 95ಕ್ಕೆ ಇಳಿಕೆಯಾಗಿದೆ.

309 ನೂತನ ಕೋವಿಡ್‌ ಸೋಂಕು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿದ್ದು, ಎಂದಿನಂತೆ ಅತಿ ಹೆಚ್ಚು ಪ್ರಕರಣಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ದಕ್ಷಿಣ ಕನ್ನಡದಲ್ಲಿ 217, ಉಡುಪಿಯಲ್ಲಿ 130 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

ರಾಜ್ಯದಲ್ಲಿ ಸೋಂಕು ಖಚಿತ ಪ್ರಮಾಣ ಶೇಕಡಾ 0.62ರಷ್ಟಿದ್ದು, ಕೊಂಚ ನೆಮ್ಮದಿಯನ್ನುಂಟು ಮಾಡಿದೆ. ಕೋವಿಡ್‌ ಕಾರಣದಿಂದ ಮೃತರಾದವರ ಪ್ರಮಾಣ ಶೇಕಡಾ 1.79 ಇದೆ. ಇಂದು ರಾಜ್ಯದಲ್ಲಿ 22 ಮಂದಿ ಕೋವಿಡ್‌ ಸೋಂಕಿನಿಂದ ಮೃತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 6, ಬೆಂಗಳೂರು ನಗರ ಮತ್ತು ಉಡುಪಿಯಲ್ಲಿ ತಲಾ ಮೂವರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೀದರ್‌, ಚಾಮರಾಜನಗರ, ಹಾಸನ ಹಾಗೂ ಮೈಸೂರಿನಲ್ಲಿ ತಲಾ 1 ಸಾವು ಸಂಭವಿಸಿರುವುದಾಗಿ ವರದಿಯಾಗಿದೆ.

ADVERTISEMENT

ರಾಜ್ಯದಲ್ಲಿಂದು ಒಟ್ಟು 1,95,966 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,224 ಮಂದಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿಂದು 1,668 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಸಕ್ರಿಯ ಪ್ರಕರಣಗಳು 19,318ಕ್ಕೆ ಇಳಿಕೆಯಾಗಿದೆ. ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ 37,206 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.