ADVERTISEMENT

‘ಭ್ರಷ್ಟಾಚಾರ ಇಲ್ಲ ಎಂದು ಹೇಳಲಾರೆ’–ಸಿಎಂ ಯಡಿಯೂರಪ್ಪ

ತಿಪಟೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿ.ಎಂ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 19:30 IST
Last Updated 20 ಮಾರ್ಚ್ 2021, 19:30 IST
ಬಿ.ಎಸ್‌.ಯಡಿಯೂರಪ್ಪ ಮಾತನಾಡಿದರು. ಶಾಸಕ ಬಿ.ಸಿ.ನಾಗೇಶ್ ಇದ್ದಾರೆ
ಬಿ.ಎಸ್‌.ಯಡಿಯೂರಪ್ಪ ಮಾತನಾಡಿದರು. ಶಾಸಕ ಬಿ.ಸಿ.ನಾಗೇಶ್ ಇದ್ದಾರೆ   

ತುಮಕೂರು: ‘ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದು ಸುಳ್ಳು ಎಂದು ನಾನು ಸಹ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ತಿಪಟೂರಿನಲ್ಲಿ ಶನಿವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಏಪ್ರಿಲ್‌ನಿಂದ ಜಿಲ್ಲಾ ಪ್ರವಾಸ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಲ್ಲಿ 15–20 ದಿನಗಳವರೆಗೆ ಕಡತಗಳನ್ನು ಇಟ್ಟುಕೊಳ್ಳಲಾಗುತ್ತಿದೆ. ಸಕಾಲಕ್ಕೆ ಕಡತಗಳು ವಿಲೇವಾರಿಯಾಗುತ್ತಿಲ್ಲ. ಈ ಬಗ್ಗೆ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಅನಗತ್ಯವಾಗಿ ಕಡತ ಇಟ್ಟುಕೊಂಡು ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

ADVERTISEMENT

‘ಜನರ ಸಮಸ್ಯೆ ಆಲಿಸುವ ಸಲುವಾಗಿ ಏಪ್ರಿಲ್‌ನಿಂದ ಜಿಲ್ಲಾ ಪ್ರವಾಸ ಮಾಡಲಾಗುವುದು. ವಾರದಲ್ಲಿ ಒಂದು ದಿನ ಜಿಲ್ಲೆಗೆ ಭೇಟಿ ನೀಡಿ ಇಡೀ ದಿನ ಅಲ್ಲಿದ್ದು, ಸಾರ್ವಜನಿಕರ ಸಮಸ್ಯೆ ಪರಿಹರಿಸಲಾಗುವುದು. ಜಿಲ್ಲೆಗಳಿಗೆ ಭೇಟಿ ನೀಡುವಂತೆ ಮುಖ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೂ ಸೂಚಿಸಿದ್ದೇನೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಳ್ಳಿಗಳಲ್ಲಿ ವಾಸ್ತವ್ಯ
ಮಾಡಿ ಜನರ ಸಮಸ್ಯೆ ಕೇಳುತ್ತಿದ್ದಾರೆ’ ಎಂದರು.

‘ಪರಿಸ್ಥಿತಿ ಅವಲೋಕಿಸಿ ನಿರ್ಧಾರ’

‘ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲೆಗಳನ್ನು ಮುಚ್ಚುವಂತಹ ವಾತಾವರಣ ನಿರ್ಮಾಣವಾಗಿಲ್ಲ. ಒಂದು ವಾರ ಪರಿಸ್ಥಿತಿಯನ್ನು ಗಮನಿಸಿ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು. ಸಾರ್ವಜನಿಕ ಸಭೆಗಳನ್ನು ನಡೆಸಲು ಯಾವುದೇ ಷರತ್ತುಗಳನ್ನು ವಿಧಿಸಿಲ್ಲ. ಆದರೆ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು. ಉಪಚುನಾವಣೆ ಸಮಯದಲ್ಲಿ ನಡೆಯುವ ಸಭೆಗಳು, ಇತರ ಕಾರ್ಯಕ್ರಮಗಳಿಗೂ ಇದು ಅನ್ವಯವಾಗುತ್ತದೆ’ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ‘ಕೋವಿಡ್ ನಿಯಂತ್ರಣ, ನಿರ್ವಹಣೆ ಸಮಯದಲ್ಲಿ ಹಣ ದುರುಪಯೋಗ ಆಗಿದ್ದರೆ ವಿರೋಧ ಪಕ್ಷದವರು ಸಾಕ್ಷ್ಯಾಧಾರಗಳ ಸಮೇತ ತಿಳಿಸಲಿ. ಆಗ ಕ್ರಮ ಕೈಗೊಳ್ಳಲಾಗುವುದು. ಆಧಾರ ರಹಿತವಾಗಿ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.