ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮದ ಆರೋಪ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 21:18 IST
Last Updated 20 ಏಪ್ರಿಲ್ 2022, 21:18 IST
   

ಬೆಂಗಳೂರು: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆರ್‌ಟಿಐ ಕಾರ್ಯಕರ್ತ ಮರಿಲಿಂಗೇಗೌಡ ಮಾಲಿ ಪಾಟೀಲ ಮನವಿ ಸಲ್ಲಿಸಿದ್ದಾರೆ.

ಮಾರ್ಚ್‌ 14ರಂದು ನಡೆದ ಭೂಗೋಳ ಪ್ರಶ್ನೆ ಪತ್ರಿಕೆಯು ಪರೀಕ್ಷೆ ಅರ್ಧ ಗಂಟೆಗೂ ಮೊದಲು, ಬೆಳಿಗ್ಗೆ 8.30ಕ್ಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ ಮೂಲಕ ಹರಿದಾಡಿತ್ತು. ಅದೇ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾರ್ಥಿಗಳಿಗೆ ನೀಡಲಾಗಿತ್ತು. ಈ ಬಗ್ಗೆ ಪೂರಕ ದಾಖಲೆಗಳ ಸಹಿತ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಾರ್ಚ್‌ 30ರಂದು ಅಭ್ಯರ್ಥಿಗಳು ದೂರು ನೀಡಿದ್ದರು. ಈ ದೂರನ್ನು ಮುಂದಿನ ಕ್ರಮಕ್ಕಾಗಿ ತಮ್ಮ ವ್ಯಾಪ್ತಿಯ ಪೊಲೀಸ್‌ ಠಾಣೆಗೆ ಕೆಇಎ ನೀಡಿದೆ. ಮೇಲ್ನೋಟಕ್ಕೆ ಪ್ರಶ್ನೆಪತ್ರಿಕೆ ಸೋರಿಕೆ ಆಗಿಲ್ಲ ಎಂದು ಕೆಇಎ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮರಿಲಿಂಗೇಗೌಡ ಮಾಲಿ ಪಾಟೀಲ, ‘ಅಭ್ಯರ್ಥಿಗಳು ದೂರು ನೀಡಿದರೂ ಉನ್ನತ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ದೂರಿದಾಗ ಪ್ರಕರಣವನ್ನು ಸಿಐಡಿಗೆ ವಹಿಸಿದ್ದರಿಂದ ಅಕ್ರಮ ಬಹಿರಂಗವಾಗಿದೆ. ಅದೇ ರೀತಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಬಗ್ಗೆಯೂ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು

ADVERTISEMENT

ಅಭ್ಯರ್ಥಿಗಳ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಲ್ಲೇಶ್ವರ ಪೊಲೀಸ್‌ ಠಾಣೆಯ ಹಿರಿಯ ಪೊಲೀಸ್‌ ಅಧಿಕಾರಿ, ‘ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲು ಆಗದೇ ಇರುವುದರಿಂದ ಸಮಗ್ರ ತನಿಖೆಗೆ ಅವಕಾಶ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.