ADVERTISEMENT

ಕೆಪಿಎಸ್‌ಸಿ 2015ರ ಸಾಲಿನಲ್ಲೂ ಅಕ್ರಮ?

ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 19:46 IST
Last Updated 25 ಫೆಬ್ರುವರಿ 2020, 19:46 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮುಖಾಂತರ 2015ರ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಎ ಮತ್ತು ಬಿ ಗುಂಪಿನ ನೇಮಕಾತಿ ವೇಳೆ ನಡೆದಿದ್ದ ಪರೀಕ್ಷಾ ಅಕ್ರಮಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ದೇಶಿಸಬೇಕು ಮತ್ತು ಅಂತಿಮ ಆಯ್ಕೆ ಪಟ್ಟಿಗೆ ತಡೆ ನೀಡಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು
ಹೈಕೋರ್ಟ್ ಆದೇಶಿಸಿದೆ.

ಈ ಕುರಿತು 14 ಸಂತ್ರಸ್ತ ಅಭ್ಯರ್ಥಿಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಹಾಗೂ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕೆಪಿಎಸ್‌ಸಿ ಕಾರ್ಯದರ್ಶಿ ಮತ್ತು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗೆ ನೋಟಿಸ್ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಎರಡು ವಾರಗಳಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ಆದೇಶಿಸಿದೆ.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿ, ‘2015ರ ತಂಡದ ಕೆಪಿಎಸ್‌ಸಿ ಪರೀಕ್ಷೆಯ ಡಿಜಿಟಲ್‌ ಮೌಲ್ಯಮಾಪನದಲ್ಲಿ ಭಾರಿ ಅಕ್ರಮ ನಡೆದಿದೆ. ಇದನ್ನು ಪತ್ತೆಹಚ್ಚಲು ಸೈಬರ್‌ ಅಪರಾಧ ವಿಭಾಗದ ತಜ್ಞರನ್ನು ಒಳಗೊಂಡ ಸತ್ಯಶೋಧನಾ ಸಮಿತಿ ರಚಿಸಬೇಕು ಮತ್ತು ಇದನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.

ಅರ್ಜಿದಾರರ ಆರೋಪಗಳೇನು?: ‘ಡಿಜಿಟಲ್‌ ಮೌಲ್ಯಮಾಪನ ನಡೆಸಿರುವ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳಲ್ಲಿ ತಮಗೆ ಬೇಕಾದ ಅಭ್ಯರ್ಥಿಗಳ ಅಂಕಗಳನ್ನು ತಿದ್ದಲಾಗಿದೆ. ಈ ದಿಸೆಯಲ್ಲಿನ ಸೂಪರ್ ಯೂಸರ್ ಕಂಟ್ರೋಲ್ ಘಟಕದ ಪಾಸ್‌ವರ್ಡ್ ಬಳಸಿ ಪದೇ ಪದೇ ಲಾಗಿನ್ ಆಗಿ ಅಕ್ರಮ ಎಸಗಲಾಗಿದೆ’ ಎಂಬುದು ಅರ್ಜಿದಾರರ ಆರೋಪ.

‘ಸೂಪರ್ ಯೂಸರ್ ಕಂಟ್ರೋಲ್ ಘಟಕದ ಪಾಸ್ ವರ್ಡ್ ಅನ್ನು ಪರೀಕ್ಷಾ ಮುಖ್ಯ ನಿಯಂತ್ರಕರು ಮಾತ್ರ ಉಪಯೋಗಿಸಲು ಅವಕಾಶವಿದೆ‌. ಆದರೆ, ಹೆಚ್ಚು ಜನ ಇದರ ಪಾಸ್‌ವರ್ಡ್ ಬಳಕೆ ಮಾಡಿದ್ದಾರೆ. ಈ ಕುರಿತಂತೆ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ವೈಯಕ್ತಿಕ ಅಂಕಗಳನ್ನು ಕೇಳಿದರೆ ಕೆಪಿಎಸ್‌ಸಿ ನಿರಾಕರಿಸುತ್ತಿದೆ. ಅಂತೆಯೇ, ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲೂ ಮಾಹಿತಿ ಸಿಗುತ್ತಿಲ್ಲ’ ಎಂದೂ ಆರೋಪಿಸಲಾಗಿದೆ.

ಪ್ರಕ್ರಿಯೆ: 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ 2017ರಲ್ಲಿ ಅಧಿಸೂಚನೆ ಹೊರಡಿಸಲಾಯಿತು. 2017ರ ಆಗಸ್ಟ್‌ 20ರಂದು ಪ್ರಾಥಮಿಕ ಪರೀಕ್ಷೆ, 2017ರ ಡಿಸೆಂಬರ್ 16ರಿಂದ 23ರವರೆಗೆ ಮುಖ್ಯ ಪರೀಕ್ಷೆ ನಡೆಸಲಾಯಿತು.

2019ರ ಜನವರಿಯಲ್ಲಿ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಯಿತು. ಇದಕ್ಕೆ 2019ರ ಆಗಸ್ಟ್ 2ರಂದು 2,123 ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗಿತ್ತು. ಅಂತಿಮ ಆಯ್ಕೆ ಪಟ್ಟಿಯನ್ನು 2020ರ ಜನವರಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಒಟ್ಟು 8,500 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದು, ಈ ಅಭ್ಯರ್ಥಿಗಳ ಡಿಜಿಟಲ್ ಮೌಲ್ಯ ಮಾಪನಕ್ಕೆ 2 ವರ್ಷಕ್ಕೂ ಹೆಚ್ಚು ಅವಧಿ ತೆಗೆದುಕೊಳ್ಳಲಾಗಿದೆ.

ಸಂತ್ರಸ್ತರ ಅಳಲು

‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಆರು ಲಕ್ಷ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಕೇವಲ 15 ದಿನಗಳಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಆದರೆ, 8,500 ಅಭ್ಯರ್ಥಿಗಳ ಅಂಕಪಟ್ಟಿಗಳ ಡಿಜಿಟಲ್ ಮೌಲ್ಯಮಾಪನಕ್ಕೆ ಕೆಪಿಎಸ್‌ಸಿ ಎರಡು ವರ್ಷಕ್ಕೂ ಹೆಚ್ಚು ಸಮಯ ತೆಗೆದುಕೊಂಡಿದ್ದು ಏಕೆ’ ಎಂಬುದು ಸಂತ್ರಸ್ತರ ಅಳಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.