ಬೆಂಗಳೂರು: ‘ರೇಷ್ಮೆ ಮಾರುಕಟ್ಟೆಯಲ್ಲಿ ಆನ್ಲೈನ್ ವಹಿವಾಟು ಆರಂಭಿಸುವಂತೆ ಎರಡು ತಿಂಗಳ ಹಿಂದೆಯೇ ಹೇಳಿದ್ದೆ. ಆದರೆ, ಬಹುತೇಕ ಮಾರುಕಟ್ಟೆಗಳಲ್ಲಿಇನ್ನೂ ಆರಂಭವಾಗಿಲ್ಲ. ಪ್ರತಿ ಬಾರಿ ನೆಪ ಹೇಳಬೇಡಿ’ ಎಂದು ಅಧಿಕಾರಿಗಳನ್ನು ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳ ಜೊತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಸಚಿವರು, ‘ರೇಷ್ಮೆ ಬೆಳೆಗಾರರಿಗೆ ಅನ್ಯಾಯ ಆಗುತ್ತಿರುವ ಮಾಹಿತಿ ಸಿಕ್ಕಿದೆ. ಮಾರುಕಟ್ಟೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ರೇಷ್ಮೆಗೂಡಿನ ತೂಕ ಸರಿಯಾಗಿ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ಜಿಲ್ಲೆಗಳ ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆಯೂ ವಿಡಿಯೊ ಸಂವಾದ ನಡೆಸಿದ ಸಚಿವರು, ‘ಆಲೂಗಡ್ಡೆ ಬೆಳೆಯುವ ರೈತರಿಗೆ ಅಧಿಕಾರಿಗಳು ಮಾಹಿತಿ ನೀಡಿ, ಬೇಕಾಗಿರುವ ಔಷಧಿ ತಕ್ಷಣ ಪೂರೈಸಬೇಕು’ ಎಂದರು.
ಪೌರಾಡಳಿತ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದ ಸಚಿವರು, ‘ನಗರೋತ್ಥಾನ ಯೋಜನೆ, 14 ಮತ್ತು 15ನೇ ಹಣಕಾಸು ಆಯೋಗ, ಅಮೃತ, ಘನತ್ಯಾಜ್ಯ ವಿಲೇವಾರಿ, ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಗಳಲ್ಲಿ ಅನುದಾನದ ಹಣ ಉಳಿದಿದೆ. ಈ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚನೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.