ಬೆಳಗಾವಿ: ‘ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವನ್ನು ಜನರೆದುರು ಸರಿಯಾಗಿ ಮಂಡಿಸುವಲ್ಲಿ ಪಕ್ಷ ಎಡವಿತ್ತು. ಸರಿಯಾಗಿ ಮಂಡಿಸಿದ್ದರೆ ವಿಧಾನಸಭೆ ಚುನಾವಣೆ ವೇಳೆ ನಮಗೆ ಅನುಕೂಲವಾಗುತ್ತಿತ್ತು’ ಎಂದು ಶಾಸಕ, ಕಾಂಗ್ರೆಸ್ನ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಿಂಗಾಯತ ಧರ್ಮ ಪ್ರತ್ಯೇಕ ಮಾಡುವುದು ಇಂದಿನ ವಿಚಾರವಲ್ಲ. ಸಿದ್ದರಾಮಯ್ಯ, ಎಂ.ಬಿ. ಪಾಟೀಲ ಅವರು ಆರಂಭಿಸಿದ ಹೋರಾಟವಲ್ಲ. 12ನೇ ಶತಮಾನದಲ್ಲಿಯೇ ಬಸವಣ್ಣನವರು ಪ್ರತ್ಯೇಕ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದರು. ಅಂದಿನಿಂದಲೂ ಹೋರಾಟ ನಡೆದಿದೆ ಎಂದು ಹೇಳಿದರು.
ಲಿಂಗಾಯತ ಧರ್ಮದ ವಿಚಾರಕ್ಕೆ ಕೈ ಹಾಕಿದ್ದರಿಂದಲೇ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಯಿತು ಎಂದು ಡಿ.ಕೆ. ಶಿವಕುಮಾರ ನೀಡಿದ ಹೇಳಿಕೆ ಕುರಿತು ವರದಿಗಾರರು ಪ್ರಶ್ನಿಸಿದಾಗ, ‘ಅದು ಅವರ ವೈಯಕ್ತಿಕ ಅಭಿಪ್ರಾಯ. ವೈಯಕ್ತಿಕ ಅಭಿಪ್ರಾಯ ಹೇಳಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಅವರ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ’ ಎಂದರು.
‘ನಾನು ಬಸವಣ್ಣನವರ ಅನುಯಾಯಿ. ಅವರ ತತ್ವಗಳನ್ನು ಪಾಲಿಸುತ್ತೇನೆ. ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು ಎನ್ನುವುದರ ಪರವಾಗಿದ್ದೇನೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.