ಕಲಬುರ್ಗಿ: ‘ಕನಿಷ್ಠ ಕೂಲಿ ನಿಗದಿ ಸೇರಿದಂತೆ ಕಾರ್ಮಿಕರ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 2019ರ ಜನವರಿ 8 ಮತ್ತು 9ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುವುದು’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್ ಮಂಗಳವಾರ ಹೇಳಿದರು.
ನಗರದಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ನ 6ನೇ ರಾಜ್ಯ ಸಮ್ಮೇಳನದ ‘ಬಹಿರಂಗ ಅಧಿವೇಶನ’ದಲ್ಲಿ ಮಾತನಾಡಿದರು.
‘ಜೀವ ವಿಮೆ, ಬ್ಯಾಂಕ್, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು. ತಿಂಗಳಿಗೆ ₹18 ಸಾವಿರ ಕನಿಷ್ಠ ಕೂಲಿ ನಿಗದಿಪಡಿಸಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ಸುಮಾರು 18 ಕೋಟಿ ಜನರು ಮುಷ್ಕರದಲ್ಲಿ ಪಾಳ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ ರಾಷ್ಟ್ರವ್ಯಾಪಿ ಮೂರು ಮುಷ್ಕರಗಳನ್ನು ನಡೆಸಲಾಗಿದ್ದು, ಇದು ನಾಲ್ಕನೆಯದ್ದಾಗಿದೆ’ ಎಂದರು.
‘ಕೆಎಸ್ಆರ್ಟಿಸಿ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಯಾರೊಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಅದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಹೋರಾಟ ಮಾಡಬೇಕು’ ಎಂದು ಕರೆ ನೀಡಿದರು.
ಫೆಡರೇಷನ್ನ ಗೌರವ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ ಮಾತನಾಡಿ, ‘ಮೋದಿ ಸರ್ಕಾರ ಜನಸಾಮಾನ್ಯರ ಹಿತ ಕಾಯದೆ ಕಾರ್ಪೋರೇಟ್ ವಲಯದ ಗುಲಾಮನಂತೆ ವರ್ತಿಸುತ್ತಿದೆ. ರಫೇಲ್ ರಾಜ ಮೋದಿ ಎಲ್ಲವನ್ನೂ ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.