ಶಿವಮೊಗ್ಗ: ‘ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಕೋರ್ಟ್ ಕ್ರಮ ಜರುಗಿಸುವ ಸಾಧ್ಯತೆ ಇದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದರು.
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಭವನಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ರಾಮಮಂದಿರ ಬೇರೆ ಕಡೆ ಕಟ್ಟಿದರೆ ದೇಣಿಗೆ ನೀಡುತ್ತೇನೆ ಎಂದು ಹಗುರವಾಗಿ ಟೀಕೆ ಮಾಡುತ್ತ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಇಂಥವರು ಮೌನವಾಗಿದ್ದರೆ ಅವರಿಗೂ ಕ್ಷೇಮ, ದೇಶಕ್ಕೂ ಕ್ಷೇಮ. ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಎಲ್ಲರೂ ಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಅದನ್ನು ಸಹಿಸದೇ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.
ಶಾಪದಿಂದಲೇ ಸರ್ಕಾರ ಪತನ: ‘ರಾಮಮಂದಿರ ಕುರಿತು ಸಿದ್ದರಾಮಯ್ಯ ಹೇಳಿಕೆ ಮುಸ್ಲಿಮರನ್ನು ಓಲೈಸುವ ತಂತ್ರ ಅಷ್ಟೇ. ಹಿಂದೆ ಗೋಹತ್ಯೆ ಮಾಡಿದವರನ್ನು ಶಿಕ್ಷಿಸುವ ಬದಲು ಗೋ ರಕ್ಷಕರ ವಿರುದ್ಧ ಕ್ರಮ ಕೈಗೊಂಡ ಪರಿಣಾಮ ಅವರ ಶಾಪ ಸಿದ್ದರಾಮಯ್ಯ ಸರ್ಕಾರ ಪತನಗೊಳ್ಳಲು ಕಾರಣವಾಗಿತ್ತು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.