ADVERTISEMENT

ವಿವಿಧ ಹುದ್ದೆಗಳ ನೇಮಕಕ್ಕೆ ಕೋರ್ಟ್ ತಡೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 19:06 IST
Last Updated 20 ಜೂನ್ 2020, 19:06 IST

ಬೆಂಗಳೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸೊಸೈಟಿಗಳ ಒಕ್ಕೂಟದಲ್ಲಿ ವಿವಿಧ ವರ್ಗಗಳ 193 ಹುದ್ದೆಗಳ ನೇಮಕಾತಿಯ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್ ತಡೆ ನೀಡಿದೆ. ಈ ಕುರಿತಂತೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ ರೆಡ್ಡಿ, ‘ಸಂದರ್ಶನದ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ, ಪರೀಕ್ಷೆ ಬರೆದವರ ಪ್ರಶ್ನೆ ಪತ್ರಿಕೆ ವಾಪಸು ಪಡೆಯಲಾಗಿದೆ ಮತ್ತು ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದ ಸರ್ಕಾರದ ನಿರ್ದೇಶನ ಪಾಲಿಸಿಲ್ಲ. ಆದ್ದರಿಂದ, ಆಯ್ಕೆ ಪ್ರಕ್ರಿಯೆಗೆ ತಡೆ ನೀಡಬೇಕು' ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯ ಪೀಠ ಸಂಪೂರ್ಣ ಆಯ್ಕೆ ಪ್ರಕ್ರಿಯೆಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.

ADVERTISEMENT

‘ತರಾತುರಿಯಲ್ಲಿ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ’ ಎಂದು ಆರೋಪಿಸಿ ಪಿ.ಎನ್.ಚೈತ್ರಾ ಈ ರಿಟ್ ಅರ್ಜಿ ಸಲ್ಲಿಸಿ ದ್ದಾರೆ. ‘ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಮೊದಲು 168 ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಹೆಚ್ಚುವರಿ 25 ಹುದ್ದೆಗಳ ನೇಮಕಾತಿಗೆ ಕಾನೂನುಬಾಹಿರವಾಗಿ ಅನುಮೋದನೆ ನೀಡಲಾಗಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.