ಬೆಂಗಳೂರು:‘ನಮ್ಮ ಹತ್ಯೆಗೆ ಯತ್ನ ನಡೆಸಲಾಯಿತು’ ಎಂದು ಆರೋಪಿಸಿ ಪ್ರೇಮಕುಮಾರಿ ಮತ್ತು ಅವರ ತಾಯಿ ಲೀಲಾವತಿ ಎಂ.ಜಡೇಜಾ ಸಲ್ಲಿಸಿರುವ ಖಾಸಗಿ ದೂರಿನ ಅನುಸಾರ ಮೈಸೂರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಕುರಿತಂತೆ ಎಸ್.ರಾಮದಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಮದಾಸ್ ಪರ ವಕೀಲ ಸಿ.ಎಚ್.ಹನುಮಂತರಾಯ ಅವರು, ‘ಖಾಸಗಿ ದೂರಿನಲ್ಲಿ ಹತ್ಯೆ ಯತ್ನದ ಆರೋಪ ಹೊರಿಸಲಾಗಿದ್ದು ಇದು ಸೆಷನ್ಸ್ ಕೋರ್ಟ್ ವಿಚಾರಣಾ ವ್ಯಾಪ್ತಿಗೆ ಒಳಪಟ್ಟಿದೆ ಮತ್ತು ತನಿಖೆಗೆ ಆದೇಶಿಸಿರುವುದು ಕಾನೂನು ಬದ್ಧವಲ್ಲ. ಆದ್ದರಿಂದ ತಡೆ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತನಿಖೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.