ADVERTISEMENT

ಕೋರ್ಟ್‌ ಸಮನ್ಸ್‌, ನೋಟಿಸ್‌: ಇ–ಮೇಲ್‌ಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2025, 15:58 IST
Last Updated 27 ಫೆಬ್ರುವರಿ 2025, 15:58 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಇನ್ನು ಮುಂದೆ ರಾಜ್ಯದ ಎಲ್ಲಾ ನ್ಯಾಯಾಲಯಗಳು ಇ-ಮೇಲ್‌ ಮೂಲಕ ನೋಟಿಸ್‌ ಅಥವಾ ಸಮನ್ಸ್‌ ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ; ಈ ಕುರಿತಾದ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ವಕೀಲ ಅನಿರುದ್ಧ ಸುರೇಶ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಅರ್ಜಿ ವಿಲೇವಾರಿ ಮಾಡಿದೆ.

ಈ ಹಿಂದಿನ ವಿಚಾರಣೆ ವೇಳೆ ಖುದ್ದು ವಾದ ಮಂಡಿಸಿದ್ದ ಅರ್ಜಿದಾರ ಅನಿರುದ್ಧ ಸುರೇಶ್‌, ‘ಇ–ಮೇಲ್‌ ಮೂಲಕ ಸಮನ್ಸ್‌ ಜಾರಿಗೊಳಿಸಲು ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದ್ದರು. 

ADVERTISEMENT

ಇದನ್ನು ಮಾನ್ಯ ಮಾಡಿದ್ದ ನ್ಯಾಯಪೀಠ, ‘ಇ–ಮೇಲ್‌ ಮೂಲಕ ನೋಟಿಸ್‌ ಜಾರಿಗಾಗಿ ನಿಯಮಗಳನ್ನು ಅನುಮೋದಿಸುವ ತುರ್ತು ಅವಶ್ಯವಿದೆ. ನಿಯಮಗಳ ತಿದ್ದುಪಡಿಗಾಗಿ ಮಾಡಿದ ಶಿಫಾರಸಿನ ಸ್ಥಿತಿಗತಿಯ ಕುರಿತಂತೆ ಫೆಬ್ರುವರಿ 25ರೊಳಗೆ ಮಾಹಿತಿ ನೀಡಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.

ಅನುಪಾಲನಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಕರಡು ನಿಯಮಗಳನ್ನು ಇದೇ 17ರಂದು ಅನುಮೋದಿಸಲಾಗಿದ್ದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಅದರಂತೆ ಹೈಕೋರ್ಟ್‌, ಜಿಲ್ಲಾ ನ್ಯಾಯಾಲಯಗಳು ಮತ್ತು ನ್ಯಾಯಮಂಡಳಿಗಳೂ ಸೇರಿದಂತೆ ಎಲ್ಲಾ ನ್ಯಾಯಾಲಯಗಳು ಎಲೆಕ್ಟ್ರಾನಿಕ್‌ ಮೇಲ್‌ ಮೂಲಕ ನೋಟಿಸ್ ಅಥವಾ ಸಮನ್ಸ್‌ಗಳನ್ನು ನೀಡುವಂತೆ ಆದೇಶಿಸುವ ಅಧಿಕಾರವನ್ನು ಹೊಂದಿವೆ’ ಎಂದು ವಿವರಿಸಿದರು.

ಕೇಸ್‌ ವಾಪಸು: ಸರ್ಕಾರಕ್ಕೆ ನೋಟಿಸ್‌

ಬೆಂಗಳೂರು: ಹಾಲಿ ಕೇಂದ್ರ–ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 60 ಕ್ರಿಮಿನಲ್‌ ಪ್ರಕರಣ ಹಿಂಪಡೆಯುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಹೈಕೋರ್ಟ್‌ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವೆಂಕಟೇಶ್‌ ಪಿ.ದಳವಾಯಿ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಗಂಭೀರವಾಗಿದೆ ಎಂಬುದನ್ನು ಮೇಲ್ನೋಟಕ್ಕೇ ಮನದಟ್ಟು ಮಾಡುವಲ್ಲಿ ಅರ್ಜಿದಾರರು ಯಶಸ್ವಿಯಾಗಿದ್ದಾರೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಪ್ರಾಸಿಕ್ಯೂಷನ್‌, ಕಾನೂನು ಮತ್ತು ಪೊಲೀಸ್‌ ಇಲಾಖೆಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮಾರ್ಚ್‌ 17ಕ್ಕೆ ಮುಂದೂಡಿತು.

ಗ್ಯಾರಂಟಿ: ಸಂಪುಟ ದರ್ಜೆ ಸ್ಥಾನಮಾನ–ನೋಟಿಸ್‌

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಲಾಗಿರುವ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಬಿಜೆಪಿಯ ಮಾಜಿ ಶಾಸಕ ಪಿ.ರಾಜೀವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ಎಂ.ಅರುಣ್ ಶ್ಯಾಮ್, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದು ಸಂವಿಧಾನದ 164 (1ಎ) ವಿಧಿಗೆ ವಿರುದ್ಧವಾಗಿದೆ’ ಎಂದು ಆಕ್ಷೇಪಿಸಿದರು.

ವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರ ವಾದದಲ್ಲಿ ಸತ್ಯಾಂಶ ಇದ್ದರೆ, ಸರ್ಕಾರದ ಕ್ರಮ ಸ್ವಾಗತಾರ್ಹವಲ್ಲ’ ಎಂಬಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಲಾಗಿದೆ.

‘ಕೆಲಸದ ಒತ್ತಡ ಜಾಸ್ತಿಯಾದರೆ ನಿದ್ರೆ ಸಹಜ’

ಬೆಂಗಳೂರು: ಕರ್ತವ್ಯ ನಿರ್ವಹಣೆ ಸಮಯದಲ್ಲಿ ನಿದ್ರೆ ಮಾಡಿದ್ದ ಆರೋಪದಡಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ವೊಬ್ಬರನ್ನು ಸೇವೆಯಿಂದ ಅಮಾನತುಪಡಿಸಿದ್ದ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

‘ಅಮಾನತು ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಕೊಪ್ಪಳ ವಿಭಾಗದ ಕುಕನೂರು ಡಿಪೊದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ಚಂದ್ರಶೇಖರ್‌ (33) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಪುರಸ್ಕರಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲರಾದ ರವಿ ಹೆಗಡೆ ಮತ್ತು ವಿನಯ ಕುಮಾರ್ ಭಟ್‌ ‘ನಿಗಮದಲ್ಲಿ ಮೂವರು ಕಾನ್‌ಸ್ಟೆಬಲ್‌ಗಳು ತಲಾ 8 ಗಂಟೆಯಂತೆ 24 ಗಂಟೆ ಕೆಲಸ ಮಾಡುತ್ತಾರೆ. ಹೆಚ್ಚಿನ ಕಾರ್ಯಭಾರ ಇದ್ದ ಕಾರಣ ಚಂದ್ರಶೇಖರ್‌ ಅವರನ್ನು ದುಪ್ಪಟ್ಟು ಕರ್ತವ್ಯ ನಿರ್ವಹಣೆಗಾಗಿ (ಡಬಲ್‌ ಡ್ಯೂಟಿ) ನಿರಂತರ 16 ಗಂಟೆಗಳ ಕಾಲ ಎರಡು ಪಾಳಿಯಲ್ಲಿ ಕೆಲಸ ಮಾಡಲು ಸೂಚಿಸಲಾಗಿತ್ತು. ಇದು 60 ದಿನಗಳವರೆಗೆ ಮುಂದುವರೆದಿತ್ತು’ ಎಂಬ ಅಂಶನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

ಈ ವಾದವನ್ನು ಪರಿಗಣಿಸಿರುವ ನ್ಯಾಯಪೀಠ ‘ನಿದ್ರೆಯ ಕೊರತೆಯಾದಲ್ಲಿ ಯಾವುದೇ ಮನುಷ್ಯ ಎಲ್ಲಿಯಾದರೂ ನಿದ್ರೆಗೆ ಜಾರುತ್ತಾನೆ. ಕೆಲಸ ಮತ್ತು ಜೀವನದ ನಡುವಿನ ಸಮತೋಲನದ ಪ್ರಮುಖ ಅಂಶವೆಂದರೆ ನಿದ್ರೆ ಮತ್ತು ವಿರಾಮ. ಉದ್ಯೋಗಿಯು ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡಿದರೆ ಅನಾಯಾಸವಾಗಿ ನಿದ್ರೆ ಆವರಿಸುವುದು ಸಹಜ’ ಎಂದು ಹೇಳಿದೆ.

ಪ್ರಕರಣವೇನು?: ‘ಚಂದ್ರಶೇಖರ್‌ ಅವರು 2024ರ ಏಪ್ರಿಲ್ 23ರಂದು ತಮ್ಮ ಕರ್ತವ್ಯ ನಿರ್ವಹಣೆ ಅವಧಿಯಲ್ಲಿ ನಿದ್ರೆ ಮಾಡುತ್ತಿದ್ದರು’ ಎಂದು ಆರೋಪಿಸಲಾದ ಹಾಗೂ ಚಂದ್ರಶೇಖರ್‌ ನಿದ್ರೆ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು. ಈ ಬಗ್ಗೆ ಚಂದ್ರಶೇಖರ್‌ ಅವರಿಂದ ವಿವರಣೆ ದಾಖಲಿಸಿಕೊಂಡಿದ್ದ ಸಂಬಂಧಿಸಿದ ಪ್ರಾಧಿಕಾರವು ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.