ADVERTISEMENT

Covid-19 Karnataka Update | 271 ಹೊಸ ಪ್ರಕರಣ, ಮೃತರ ಸಂಖ್ಯೆ 79ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 20:10 IST
Last Updated 12 ಜೂನ್ 2020, 20:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌ನಿಂದ ಏಳುಮಂದಿ ಮೃತಪಟ್ಟಿರುವುದು ಶುಕ್ರವಾರ ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ನಾಲ್ವರು, ಕಲಬುರ್ಗಿಯಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಈ ಅವಧಿಯಲ್ಲಿ 22 ಮಂದಿ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ 97 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 271 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 6,516ಕ್ಕೆ ತಲುಪಿದೆ.

ಶುಕ್ರವಾರ ಒಂದೇ ದಿನ ಯಾದಗಿರಿಯಲ್ಲಿ 129 ಸೇರಿದಂತೆ 464 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 92 ಮಂದಿ ಅನ್ಯರಾಜ್ಯಗಳಿಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 65 ವರ್ಷದ ಮಹಿಳೆ, 52 ವರ್ಷದ ಪುರುಷಹಾಗೂ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್‌ಐ) ಬಳಲುತ್ತಿದ್ದ 49 ವರ್ಷದ ಮಹಿಳೆ ಜೂ.10ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮೂವರು ಜೂ.11ರಂದು ಮೃತಪಟ್ಟಿದ್ದಾರೆ.

ಐಎಲ್‌ಐ ಸಮಸ್ಯೆಯಿಂದ ಬಳಲುತ್ತಿದ್ದ 61 ವರ್ಷದ ಮಹಿಳೆ ಜೂ.6ರಂದು ದಾಖಲಾಗಿ, ಜೂ.10ರಂದು ನಿಧನರಾಗಿದ್ದರು.

ಕಲಬುರ್ಗಿಯಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 53 ವರ್ಷದ ಪುರುಷ ಹಾಗೂ 48 ವರ್ಷದ ವ್ಯಕ್ತಿ ಜೂ.9ರಂದು ಆಸ್ಪತ್ರೆಗೆ ದಾಖಲಾಗಿ, ಜೂ.10ರಂದು ಮೃತಪಟ್ಟಿದ್ದಾರೆ. ಹಾಸನದಲ್ಲಿ 60 ವರ್ಷದ ಪುರುಷ ಜೂ.11ರಂದು ಆಸ್ಪತ್ರೆಗೆ ದಾಖಲಾಗಿ, ಜೂ.12ರಂದು ನಿಧನರಾಗಿದ್ದಾರೆ. ಇವರು ಸೋಂಕಿತರಾಗಿದ್ದರು ಎನ್ನುವುದು ಪರೀಕ್ಷೆಯ ಬಳಿಕ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.