ಬೆಂಗಳೂರು: ವಿವಿಧ ದೇಶಗಳಿಂದ ರಾಜ್ಯಕ್ಕೆ ಬುಧವಾರ 1,441 ಮಂದಿ ಬಂದಿದ್ದು, ಅವರನ್ನು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ.
ಅವರಿಗೆ ಆರ್ಟಿ–ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಮನೆ ಕ್ವಾರಂಟೈನ್ಗೆ ಒಳಪಡಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 958 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.12 ಲಕ್ಷ ದಾಟಿದೆ. ಈ ತಿಂಗಳು 23 ದಿನಗಳಲ್ಲಿ 27,444 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,193 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.
ಸೋಂಕಿತರಲ್ಲಿ ಮತ್ತೆ 9 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 12,038ಕ್ಕೆ ತಲುಪಿದೆ. ಒಂದೇ ದಿನ 90 ಸಾವಿರ ಆರ್ಟಿ–ಪಿಸಿಆರ್ ಸೇರಿದಂತೆ 99 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.33 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ 1,206 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.86 ಲಕ್ಷಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 13,736 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 217 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದ ಜ್ವರ ಚಿಕಿತ್ಸಾಲಯಗಳಲ್ಲಿ ಈವರೆಗೆ 32.96 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಬೆಂಗಳೂರಿನಲ್ಲಿ 550 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.84 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 43 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 51,957ಕ್ಕೆ ತಲುಪಿದೆ. ತುಮಕೂರಿನಲ್ಲಿ 50, ಚಾಮರಾಜನಗರದಲ್ಲಿ 27, ಹಾಸನದಲ್ಲಿ 26 ಪ್ರಕರಣಗಳು ಪತ್ತೆಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.