ಬೆಂಗಳೂರು: ಕೋವಿಡ್ ರೋಗಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ಸಿಗಲಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿಯವರ ನಿವಾಸ ಕಾವೇರಿ ಮುಂದೆ ರೋಗಿ ಮತ್ತು ಅವರ ಪತ್ನಿ ಗುರುವಾರ ಬೆಳಿಗ್ಗೆ ಧರಣಿ ನಡೆಸಿದರು.
ರೋಗಿಯ ಪತ್ನಿ ಕಣ್ಣೀರು ಹಾಕುತ್ತಾ ತಮ್ಮ ಪತಿಯನ್ನು ಉಳಿಸಿಕೊಳ್ಳಲು ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಡಿ ಎಂದು ಪರಿಪರಿಯಾಗಿ ಬೇಡಿಕೊಂಡರು. ಈ ವಿಷಯ ಮುಖ್ಯಮಂತ್ರಿಯವರ ಗಮನಕ್ಕೆ ಬರುತ್ತಿದ್ದಂತೆ, ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹಾಸಿಗೆ ವ್ಯವಸ್ಥೆ ಮಾಡಿಸಿದರು. ಆದರೆ, ಆಸ್ಪತ್ರೆಗೆ ಒಯ್ಯುವ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟರೆಂದು ಮೂಲಗಳು ಹೇಳಿವೆ.
ಮೃತರನ್ನು ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ‘ಮುಖ್ಯಮಂತ್ರಿಯವರಿಗೆ ವಿಷಯ ಗೊತ್ತಾದ ತಕ್ಷಣವೇ ಎಂ.ಎಸ್.ರಾಮಯ್ಯದಲ್ಲಿ ಹಾಸಿಗೆ ವ್ಯವಸ್ಥೆ ಮಾಡಿಸಿಕೊಟ್ಟರು’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.