ಬೆಂಗಳೂರು: ರಾಜ್ಯದಲ್ಲಿ ಇದೇ ತಿಂಗಳು ಕಾಣಿಸಿಕೊಂಡಿರುವ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಿದ್ದು, ಕೋವಿಡ್ ಪೀಡಿತರಲ್ಲಿ ಶೇ 5 ರಷ್ಟು ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಪ್ರಮಾಣ ಎರಡನೇ ಅಲೆಯಲ್ಲಿ ಶೇ 21ಕ್ಕೆ ಏರಿಕೆಯಾಗಿತ್ತು.
ರಾಜ್ಯದಲ್ಲಿ ವರದಿಯಾದ ಕೋವಿಡ್ ಪ್ರಕರಣಗಳನ್ನು ಆಧರಿಸಿ ಕೋವಿಡ್ ವಾರ್ ರೂಮ್ ವಿಶ್ಲೇಷಣೆ ಮಾಡಿದೆ. 2020ರ ಮಾರ್ಚ್ನಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ಮೊದಲ ಅಲೆಯಲ್ಲಿ 9.51 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದವು. 2020ರ ಅ.10ರ ವೇಳೆಗೆ ರಾಜ್ಯದಲ್ಲಿ 1.20 ಲಕ್ಷ ಸಕ್ರಿಯ ಪ್ರಕರಣಗಳಿದ್ದವು. ಸೋಂಕಿತರಲ್ಲಿ ಶೇ 16 ರಷ್ಟು ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದರು. ಇನ್ನುಳಿದವರು ಮನೆ ಆರೈಕೆಯಲ್ಲಿಯೇ ಚೇತರಿಸಿಕೊಂಡಿದ್ದರು. ಮೊದಲ ಅಲೆಯಲ್ಲಿ 12 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
2021ರ ಮಾರ್ಚ್ನಲ್ಲಿ ಕಾಣಿಸಿಕೊಂಡ ಎರಡನೇ ಅಲೆಯಲ್ಲಿ 20.53 ಲಕ್ಷ ಮಂದಿ ಕೋವಿಡ್ ಪೀಡಿತರಾಗಿದ್ದಾರೆ. 2021ರ ಮೇ 15ರ ವೇಳೆಗೆ ರಾಜ್ಯದಲ್ಲಿ 6.05 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದವು. ಸೋಂಕಿನ ತೀವ್ರತೆ ಹೆಚ್ಚಿದ್ದರಿಂದ ಕೋವಿಡ್ ಪೀಡಿತರಲ್ಲಿ ಶೇ 21 ರಷ್ಟು ಮಂದಿ ಆಸ್ಪತ್ರೆ ಚಿಕಿತ್ಸೆ ಪಡೆದುಕೊಂಡಿದ್ದರು. 25 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು.,
ಮೂರನೇ ಅಲೆಯಲ್ಲಿ 2022ರ ಜ.20 ರ ವೇಳೆಗೆ 31.53 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಅವರಲ್ಲಿ ಶೇ 94 ರಷ್ಟು ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ 204 ಮಂದಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.