ADVERTISEMENT

ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 10 ಮೇ 2021, 7:55 IST
Last Updated 10 ಮೇ 2021, 7:55 IST
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯದಲ್ಲಿ ಹೇರಲಾಗಿರುವ 14 ದಿನಗಳ ಕಠಿಣ ಲಾಕ್‌ಡೌನ್ ವೇಳೆ ರಾಜ್ಯ ಸರ್ಕಾರವು ಸಂಕಷ್ಟದಲ್ಲಿರುವ ನಾಗರಿಕರನ್ನು ಮರೆತಿರುವುದು ದುರಂತ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಸೋಮವಾರದಿಂದಲೇ ಲಾಕ್‌ಡೌನ್ ಜಾರಿಗೆ ಬಂದಿದೆ. ಜನರನ್ನು ದನಕ್ಕೆ ಬಡಿದಂತೆ ಬಡಿಯಲಾಗುತ್ತದೆ. ನಾನು ಸಲಹೆ ಮಾಡಿರುವ ಲಾಕ್‌ಡೌನ್ ಇದಾಗಿರಲಿಲ್ಲ ಎಂದು ಟೀಕೆ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು ಎಂದಿದ್ದಾರೆ.

ADVERTISEMENT

ಸರ್ಕಾರ ಬೇಜವಾಬ್ದಾರಿತನ...
ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್‌ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳ ಕುತಂತ್ರ...
ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಹೇಳಿದ್ದಾರೆ.

ಸರ್ಕಾರವೇ ಪರಿಹಾರ ನೀಡಬೇಕು...
ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂದು ದೂರಿದರು.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್‌ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಸಲಹೆ ಮಾಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.