ADVERTISEMENT

ಕೋವಿಡ್‌: ಕೇರಳ ಗಡಿಯಲ್ಲಿ ಜಾರಿಯಾಗದ ಕ್ರಮ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 19:31 IST
Last Updated 12 ಮಾರ್ಚ್ 2021, 19:31 IST
ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವವರ ತಪಾಸಣೆ ನಡೆಸಲಾಗುತ್ತಿದೆ.
ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವವರ ತಪಾಸಣೆ ನಡೆಸಲಾಗುತ್ತಿದೆ.   

ಮಂಗಳೂರು: ಕೇರಳದಿಂದ ಬರುವವರಿಗೆ ಕೋವಿಡ್–19 ನೆಗೆಟಿವ್ ಪ್ರಮಾಣಪತ್ರ ಕಡ್ಡಾಯಗೊಳಿಸಿದ್ದರೂ, ಅದನ್ನು ಕಾರ್ಯರೂಪಕ್ಕೆ ತರುವುದು ಜಿಲ್ಲಾಡಳಿತಕ್ಕೆ ಕಷ್ಟದ ಕೆಲಸವಾಗಿದೆ. ಒಂದೆಡೆ ಈ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇನ್ನೊಂದೆಡೆ ಜನಪ್ರತಿನಿಧಿಗಳ ಹೇಳಿಕೆಗಳು ಗೊಂದಲ ಸೃಷ್ಟಿಸುತ್ತಿವೆ.

‘ರಾಜ್ಯ ಸರ್ಕಾರದ 2021 ಫೆಬ್ರುವರಿ 16ರ ಸುತ್ತೋಲೆ ಪ್ರಕಾರ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕೇಳಬಹುದು. ವರದಿ ಇಲ್ಲದಿದ್ದರೂ ಪ್ರವೇಶಕ್ಕೆ ನಿರ್ಬಂಧ ಹೇರುವಂತಿಲ್ಲ. ಪ್ರವೇಶ ದ್ವಾರಗಳನ್ನು ಮುಚ್ಚಲು ಸುತ್ತೋಲೆಯಲ್ಲಿ ತಿಳಿಸಲಾಗಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ. ಮಾರ್ಚ್‌ 18ಕ್ಕೆ ವಿಚಾರಣೆ ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಆರಂಭವಾಗಿಲ್ಲ. ಆದರೆ, ನಿತ್ಯ ಓಡಾಡುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್‌ ವರದಿಯನ್ನು ಪ್ರತಿ 15 ದಿನಕ್ಕೊಮ್ಮೆ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾರ್ಯಪಡೆ: ಈಗಾಗಲೇ ತಲಪಾಡಿಯಲ್ಲಿ ಗಂಟಲು ದ್ರವ ಮಾದರಿ ತಪಾಸಣೆ ಕೇಂದ್ರ ತೆರೆಯಲಾಗಿದೆ. ಕೇರಳದಿಂದ ಬರುವವರ ಗಂಟಲು ದ್ರವ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಕೇರಳದಿಂದ ಬರುವವರ ಮೇಲೆ ನಿಗಾ ಇಡಲು ಗ್ರಾಮಮಟ್ಟದಲ್ಲಿ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.