ಬೆಂಗಳೂರು: ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶನಿವಾರ 5 ಗಂಟೆಯಿಂದ ಭಾನುವಾರ 5 ಗಂಟೆವರೆಗೆ ರಾಜ್ಯದಲ್ಲಿ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ ಕೋವಿಡ್-19 ನಿಂದಾಗಿ 16 ಜನರು ಮೃತಪಟ್ಟಿದ್ದು, 111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೋವಿಡ್-19 ಪೀಡಿತ 263 ವ್ಯಕ್ತಿಗಳಲ್ಲಿ 260 ರೋಗಿಗಳು (ಒಬ್ಬರು ಗರ್ಭಿಣಿ (ಪ್ರಕರಣ-176 ಸೇರಿದಂತೆ) ನಿಗದಿಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ಗಳಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಆರೋಗ್ಯ ಸ್ಥಿರವಾಗಿದ್ದು, ಮೂವರನ್ನು ಐಸಿಯುನಲ್ಲಿ ಇಡಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಕರಣ 385 ಮೈಸೂರಿನ 46 ವರ್ಷದ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಇವರು ದೆಹಲಿಗೆ ಪ್ರಯಾಣ ಮಾಡಿದ ಹಿನ್ನೆಲೆಯನ್ನು ಹೊಂದಿದ್ದಾರೆ. ಸದ್ಯ ಇವರನ್ನು ಮೈಸೂರಿನ ನಿಗಧಿತ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. 20 ವರ್ಷದ ಮೈಸೂರಿನ ವ್ಯಕ್ತಿಗೂ ಕೂಡ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ದೆಹಲಿಗೆ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದಾರೆ. ಸದ್ಯ ಪ್ರತ್ಯೇಕವಾಗಿ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡದ ಉಪ್ಪಿನಂಗಡಿಯ 30 ವರ್ಷದ ಮಹಿಳೆ ಮತ್ತು ಬಂಟ್ವಾಳದ 50 ವರ್ಷದ ಮಹಿಳೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದಾಗಿ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ನಗರದ ನಿವಾಸಿಯಾಗಿರುವ ಪ್ರಕರಣ 281ರ 65 ವರ್ಷದ ಮಹಿಳೆಯು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಿವಾಸಿಯಾಗಿರುವ ಪ್ರಕರಣ 390ರ 50 ವರ್ಷದ ಮಹಿಳೆ ಕೂಡ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.