ADVERTISEMENT

ಹುಬ್ಬಳ್ಳಿ: ಮುಚ್ಚಳಿಕೆ ಬರೆಸಿಕೊಂಡು ಕೋವಿಡ್‌ ಲಸಿಕೆ ಪಡೆದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 2:43 IST
Last Updated 29 ನವೆಂಬರ್ 2021, 2:43 IST
ಹುಬ್ಬಳ್ಳಿ ಮಹಾನಗರ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಮುಚ್ಚಳಿಕೆ ಬರೆಸಿಕೊಂಡು ಯಲ್ಲಾಪುರ ಓಣಿಯ ಆನಂದ ಕೊನ್ನೂರಕರ ಅವರು ಕೋವಿಡ್‌ ಲಸಿಕೆ ಪಡೆದರು.
ಹುಬ್ಬಳ್ಳಿ ಮಹಾನಗರ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಮುಚ್ಚಳಿಕೆ ಬರೆಸಿಕೊಂಡು ಯಲ್ಲಾಪುರ ಓಣಿಯ ಆನಂದ ಕೊನ್ನೂರಕರ ಅವರು ಕೋವಿಡ್‌ ಲಸಿಕೆ ಪಡೆದರು.    

ಹುಬ್ಬಳ್ಳಿ: ‘ಕೋವಿಡ್‌ ಲಸಿಕೆಯಿಂದ ಆರೋಗ್ಯಕ್ಕೇನಾದರೂ ಸಮಸ್ಯೆಯಾದರೆ ನಾವೇ ಜವಾಬ್ದಾರಿ’ ಎಂದು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯ್ತಿ ವ್ಯಕ್ತಿಯೊಬ್ಬರಿಗೆ ಮುಚ್ಚಳಿಕೆ ಬರೆದುಕೊಟ್ಟು ಕೋವ್ಯಾಕ್ಸಿನ್‌ ಲಸಿಕೆ ನೀಡಿದ ಅಪರೂಪದ ಪ್ರಕರಣ ಭಾನುವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ನಡೆಯಿತು.

ಲಸಿಕೆ ಪಡೆಯುವ ಕುರಿತು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ನೇತೃತ್ವದಲ್ಲಿ ಧಾರ್ಮಿಕ ಮುಖಂಡರ ಸಭೆ ಕರೆಯಲಾಗಿತ್ತು. ‘ಲಸಿಕೆ ಪಡೆಯುವ ಕುರಿತು ಭಯವಾಗುತ್ತಿದೆ. ಆರೋಗ್ಯದಲ್ಲಿ ಸಮಸ್ಯೆಯಾದರೆ ಯಾರು ಹೊಣೆ?’ ಎಂದು ಯಲ್ಲಾಪುರ ಓಣಿ ನಿವಾಸಿ ಆನಂದ ಕೊನ್ನೂರಕರ ಆತಂಕ ವ್ಯಕ್ತಪಡಿಸಿದರು.

‘ಕುಟುಂಬ ಸದಸ್ಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ನಾನು ಲಸಿಕೆ ಪಡೆದಾಗ ಹೆಚ್ಚು ಕಡಿಮೆಯಾದರೆ ಎನ್ನುವ ಭಯ ಕಾಡುತ್ತಿದೆ. ಏನಾದರೂ ಆದರೆ ಕುಟುಂಬದ ಕಥೆಯೇನು? ಜಿಲ್ಲಾಡಳಿತವೇ ಜವಾಬ್ದಾರಿ ವಹಿಸಿಕೊಳ್ಳುತ್ತದೆ ಎಂದು ಮುಚ್ಚಳಿಕೆ ಬರೆದುಕೊಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿ ಹೇಳುವ ಪ್ರಯತ್ನ ಪ್ರಯೋಜನವಾಗಿಲ್ಲ. ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್‌ ‘ಲಸಿಕೆಯಿಂದ ಅಡ್ಡ ಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ವಹಿಸಿಕೊಳ್ಳುತ್ತೇವೆ’ ಎಂದು ಮುಚ್ಚಳಿಕೆ ಬರೆದು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ, ಉಪ ವಿಭಾಗಾಧಿಕಾರಿ ಸಹಿ ಜೊತೆ ತಮ್ಮ ಸಹಿ ಹಾಕಿ ನೀಡಿದರು. ಅಲ್ಲದೆ, ಅಲ್ಲಿಯೇ ಆನಂದ ಅವರಿಗೆ ಕೋವ್ಯಾಕ್ಸಿನ್‌ ಲಸಿಕೆ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.