ಬೆಂಗಳೂರು: ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ನ 5 ನೇ ದಿನದ ಘೋಷಣೆಗಳು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕಾ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯಗಳಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕೇಂದ್ರ ಸರ್ಕಾರದ ‘ಆತ್ಮ ನಿರ್ಭರ್ ಭಾರತ’ ದ ಆಶಯ ಸಾಕಾರಗೊಳಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲೂ ಶ್ರಮಿಸಲಿದೆ ಎಂದು ಯಡಿಯೂರಪ್ಪ ಕೇಂದ್ರಕ್ಕೆ ಆಶ್ವಾಸನೆ ಕೊಟ್ಟಿದ್ದಾರೆ.
‘ಟಿ.ವಿ ಚಾನೆಲ್ಗಳನ್ನು ಪ್ರಾರಂಭ ಮಾಡಿ ಮಕ್ಕಳಿಗೆ ಪಾಠ ಹೇಳುವುದು ಒಂದು ಒಳ್ಳೆಯ ನಿರ್ಧಾರ. ಇದರಿಂದ ಶಾಲಾ ದಿನಗಳನ್ನು ಕಳೆದುಕೊಂಡ ಮಕ್ಕಳಿಗೆ ಒಳ್ಳೆಯದಾಗಲಿದೆ. ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆ ಇಲ್ಲಿಯವರೆಗೆ ನಾವು ಅಳವಡಿಸಿಕೊಂಡು ಬಂದ ಔಪಚಾರಿಕ ಪದ್ಧತಿಯ ವಿದ್ಯಾರ್ಜನೆಯ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡುತ್ತದೆ. ಇ-ಎಜುಕೇಷನ್ ಯೋಜನೆ ದೇಶದ ವಿದ್ಯಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಿದೆ’ ಎಂದು ಹೇಳಿದ್ದಾರೆ.
ಕೋವಿಡ್-19 ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಔದ್ಯೋಗಿಕ ಘಟಕಗಳು ಮತ್ತು ವ್ಯಕ್ತಿಗಳ ವಿರುದ್ಧ ಆರ್ಥಿಕ ದಿವಾಳಿತನದ ಕಾನೂನಿಗೆ ಒಳಪಡಿಸಲಾಗುವುದಿಲ್ಲ ಎಂಬ ತೀರ್ಮಾನ ಆರ್ಥಿಕ ಸಂಕಷ್ಟದಲ್ಲಿರುವ ಎಂ.ಎಸ್.ಎಂ.ಇ. ಮಾಲೀಕರಿಗೆ ನೆಮ್ಮದಿ ತರಲಿದೆ ಮತ್ತು ಅವರಿಗೆ ಇನ್ನೊಮ್ಮೆ ಆರ್ಥಿಕ ಪುನಃಶ್ಚೇತನಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂದಿದ್ದಾರೆ.
ಎಲ್ಲ ವಲಯಗಳಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಮುಕ್ತವಾಗಿವೆ ಎಂದು ಘೋಷಿಸಿದ್ದು, ಇದು ನಷ್ಟದಲ್ಲಿರುವ ಸರ್ಕಾರಿ ವಲಯದ ಸಂಸ್ಥೆಗಳಿಗೆ ಹೊಸ ಜೀವ ಬಂದಂತಾಗುತ್ತದೆ ಎಂದೂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.