ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ವ್ರತದ ತಿಂಗಳುಇದೇ 24 ಅಥವಾ 25ರಂದು ಆರಂಭವಾಗಲಿದ್ದು, ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಮಸೀದಿ ಅಥವಾ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದು ಮೇ 3ರವರೆಗೆ ಇದು ಜಾರಿಯಲ್ಲಿರುತ್ತದೆ.
ಮಸೀದಿ ಅಥವಾ ದರ್ಗಾಗಳಲ್ಲಿ ಇಮಾಮ್ಗಳು ಮತ್ತು ಸಿಬ್ಬಂದಿ ಮಾತ್ರ ನಮಾಜ್ ಮಾಡಬಹುದು, ಸಾರ್ವಜನಿಕರು
ಬರುವುದಕ್ಕೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.
ಇದೇ ಆದೇಶಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರೂ ಆದೇಶ ಹೊರಡಿಸಿ, ರಂಜಾನ್ ಅವಧಿಯಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಮೂರು ಭಾಷೆಗಳಲ್ಲಿ ಧ್ವನಿಸುರುಳಿ ಸಿದ್ಧಪಡಿಸಿ, ಪ್ರತಿದಿನ ನಾಲ್ಕು ಬಾರಿ ಪ್ರಚಾರ ಮಾಡಬೇಕು ಎಂದು ಸೂಚಿಸಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಇಫ್ತಾರ್, ಸಾಮೂಹಿಕ ಪ್ರಾರ್ಥನೆಗಳನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಕರ್ನಾಟಕ ಇಮಾರತ್–ಇ–ಶರಿಯಾ ಕೂಡಾ ಇದೇ 14ರಂದು ನಿಯಮ ರೂಪಿಸಿದೆ. ಅದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಲಾಗಿದೆ.
ಈ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.