ಬೆಂಗಳೂರು: ಕೋವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ಪಡೆದುಕೊಳ್ಳುವಂತೆ ಉತ್ತೇಜಿಸಲು ರಾಜ್ಯದಲ್ಲಿಯೂ ‘ಹರ್ ಘರ್ ದಸ್ತಕ್’ ಅಭಿಯಾನವನ್ನು ಇದೇ 30ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ‘ಮುಂಚೂಣಿ ಆರೋಗ್ಯ ಕಾರ್ಯಕರ್ತರು ಈ ಅಭಿಯಾನದಡಿ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರ ಮನೆಗಳಿಗೆ ಭೇಟಿ ನೀಡಬೇಕು. ಲಸಿಕೆ ಪಡೆಯುವುದರಿಂದ ಆಗುವ ಉಪಯೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ಲಸಿಕೆ ವಿತರಣೆಗೆ ಸೂಕ್ತ ಸ್ಥಳವನ್ನು ಗುರುತಿಸಿ, ಮುಂದಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
‘ಕೋವಿಡ್ನಿಂದ ಸಂಪೂರ್ಣ ಸುರಕ್ಷತೆ ಪಡೆಯಲು ಎರಡನೇ ಡೋಸ್ ಅತ್ಯಗತ್ಯ. ಜನ ಸಂಚಾರ ಇರುವ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಹಡಗು ನಿಲ್ದಾಣದಲ್ಲಿ ಕೋವಿಡ್ ಲಸಿಕೆಯ ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಿ, ಲಸಿಕೆ ಒದಗಿಸಬೇಕು. ಉನ್ನತ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಲಸಿಕಾಕರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ.
‘ಲಸಿಕೆ ವಿತರಣೆಯಲ್ಲಿ ಅತೀ ಕಡಿಮೆ ಪ್ರಗತಿ ಹೊಂದಿರುವ ಪ್ರದೇಶಗಳಲ್ಲಿ ಶೇ 100 ರಷ್ಟು ಲಸಿಕಾಕರಣ ನಡೆಸಲು ತಂಡಗಳನ್ನು ರಚಿಸಿ, ಸಮಯ ನಿಗದಿ ಮಾಡಬೇಕು. ಕೋವಿಡ್ ಲಸಿಕಾಕರಣದಲ್ಲಿ ಪಾಲ್ಗೊಳ್ಳುವ ತಂಡಗಳನ್ನು ಪ್ರೆರೇಪಿಸಲು ಹೆಚ್ಚು ಪ್ರಗತಿ ತೋರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ 5 ಲಸಿಕಾ ತಂಡಗಳನ್ನು ವಾರಕ್ಕೊಮ್ಮೆ ಅಭಿನಂದಿಸಬೇಕು’ ಎಂದು ಹೇಳಿದ್ದಾರೆ.
‘ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಧಾರ್ಮಿಕ ಗುರುಗಳು, ಪ್ರಖ್ಯಾತ ವೈದ್ಯರು, ಕ್ರೀಡಾಪಟುಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಬಳಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.