ಹುಬ್ಬಳ್ಳಿ: ಕೋವಿಡ್–19 ಕೆಲಸಕ್ಕೆ ನಿಯೋಜಿಸುವ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.
ಕೋವಿಡ್–19 ಕರ್ತವ್ಯ ನಿರ್ವಹಿಸುವಾಗ, ಕೋವಿಡ್ನಿಂದ ಅಕಾಲಿಕವಾಗಿ ಮೃತರಾದ ಸರ್ಕಾರಿ ನೌಕರರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಲಾಗುವುದು. ಸೋಂಕಿಗೆ ಒಳಗಾದರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದು. ಆದರೆ, ಇದೇ ಕೆಲಸ ಮಾಡುವ ಅನುದಾನಿತ ನೌಕರರಿಗೆ ಈ ಸೌಲಭ್ಯವಿಲ್ಲ ಎಂದು ದೂರಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು ಸಹ ಮನುಷ್ಯರೇ ಆಗಿದ್ದು, ಅವರಿಗೆ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಬೇಕು. ಇಲ್ಲದಿದ್ದಲ್ಲಿ, ಅವರನ್ನು ಕೋವಿಡ್–19 ತಡೆಗೆ ಸಂಬಂಧಿಸಿದ ಕೆಲಸಕ್ಕೆ ನಿಯೋಜಿಸಬಾರದು.ಒಂದೇ ಕೆಲಸ ಮಾಡಿದರೂ ತಾರತಮ್ಯ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.