ADVERTISEMENT

ಕಾರಜೋಳ ಕುಟುಂಬದ 8 ಮಂದಿಗೆ ಕೋವಿಡ್‌: 23 ದಿನಗಳಿಂದ ವೆಂಟಿಲೇಟರ್‌ನಲ್ಲಿರುವ ಪುತ್ರ

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 2:23 IST
Last Updated 19 ಅಕ್ಟೋಬರ್ 2020, 2:23 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಂಗಳೂರು: ‘ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್‌ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದಾನೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಪ್ರವಾಹಪೀಡಿತ ಜಿಲ್ಲೆಗಳಿಗೆ ಭೇಟಿ ನೀಡದೆ ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದುದಕ್ಕೆ ವ್ಯಕ್ತವಾದ ಟೀಕೆಗಳಿಗೆ ಭಾನುವಾರ ಪ್ರತಿಕ್ರಿಯಿಸಿರುವ ಅವರು, ‘ಸಾರ್ವಜನಿಕ ಬದುಕಿನಲ್ಲಿರುವವರ ವೈಯಕ್ತಿಕ ಬದುಕಿನ ಸಂತಸ, ಸಂಕಟಗಳು ಜನರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಸಂಕಷ್ಟಗಳು ಯಾವತ್ತಿಗೂ ಅನಾಥ. ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರನ್ನು ಕನ್ನಡಕ ಹಾಕಿ ನೋಡುವ ಪ್ರವೃತ್ತಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದಿದ್ದಾರೆ.

‘ನಾನು ಕೋವಿಡ್‌ನಿಂದ ಗುಣಮುಖನಾಗಿದ್ದೇನೆ. ಅನಿವಾರ್ಯವಾದರೆ ಮಾತ್ರ, ಆಯಾಸ ಆಗದಂತೆ ಹೊರಗಡೆ ಓಡಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ. ದೂರದ ಪ್ರಯಾಣ ಮಾಡಬಾರದು ಎಂಬ ಸೂಚನೆ ಇದೆ. ಪ್ರವಾಹ ಪೀಡಿತ ಕಲಬುರ್ಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವ ಕುರಿತು ನಿರಂತರವಾಗಿ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ. ನಾನು ವೈಯಕ್ತಿಕವಾಗಿ ಅಲ್ಲಿಗೆ ಭೇಟಿ ನೀಡದೆ ಇರಬಹುದು. ಆದರೆ, ಉಪ ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ’ ಎಂದಿದ್ದಾರೆ.

ADVERTISEMENT

‘ಒಂದು ಘಟನೆಯಿಂದಷ್ಟೆ ವ್ಯಕ್ತಿಯನ್ನು ಅಳೆಯಲು ಹೋಗಬಾರದು. ಹಿಂದಿನ ವಿದ್ಯಮಾನಗಳು ಈಗಿನ ಸ್ಥಿತಿಯನ್ನು ಗುರುತಿಸಲು ಯಾವತ್ತಿಗೂ ನಿರ್ಣಾಯಕ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.