ADVERTISEMENT

ಹೊಸದಾಗಿ 435 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಕೋವಿಡ್‌ ಪ್ರಕರಣಗಳ ಸಂಖ್ಯೆ 9.36 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 19:12 IST
Last Updated 26 ಜನವರಿ 2021, 19:12 IST
   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 435 ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಯಿತು. ಗಣರಾಜ್ಯೋತ್ಸವ ದಿನದ ಪ್ರಯುಕ್ತ ರಜೆ ಇದ್ದ ಕಾರಣ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಿಲ್ಲ.

ರಾಜ್ಯದಲ್ಲಿ ಒಟ್ಟಾರೆ ಲಸಿಕೆ ಪಡೆದವರ ಸಂಖ್ಯೆ ಸೋಮವಾರ ಎರಡು ಲಕ್ಷ ಗಡಿ ದಾಟಿತ್ತು. ಲಸಿಕೆ ವಿತರಣೆ ಅಭಿಯಾನದ 11ನೇ ದಿನವಾದ ಮಂಗಳವಾರ 12 ಕೇಂದ್ರಗಳಲ್ಲಿ 1,094 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಶೇ 40 ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಲಸಿಕೆ ವಿತರಣೆಯಾಗಿದೆ. ಬೆಂಗಳೂರು ಗ್ರಾಮಾಂತರ 43, ಧಾರವಾಡ 40, ಹಾಸನ 227, ರಾಯಚೂರಿನಲ್ಲಿ 73 ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಈವರೆಗೂ ಒಟ್ಟಾರೆ 2.31 ಲಕ್ಷ ಜನ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಿಗೂ ತೀವ್ರ ಮತ್ತು ಗಂಭೀರ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಬುಧವಾರ ಎಲ್ಲ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

9.36 ಲಕ್ಷಕ್ಕೆ ಏರಿಕೆ:

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 9.36 ಲಕ್ಷಕ್ಕೆ ಏರಿದೆ. ಹೊಸದಾಗಿ 529 ಜನರಿಗೆ ಸೋಂಕು ದೃಢಪಟ್ಟಿದ್ದು, 738 ಜನ ಗುಣಮುಖರಾಗಿದ್ದಾರೆ. ಈವರೆಗೆ 9.18 ಲಕ್ಷ ಮಂದಿ ಕೋವಿಡ್‌ನಿಂದ ಮುಕ್ತರಾದಂತಾಗಿದೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರು ಸಾವಿಗೀಡಾಗುವ ಮೂಲಕ ಮೃತರ ಸಂಖ್ಯೆ 12,204ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಪೈಕಿ 6,633 ಮಂದಿ ಮನೆ ಹಾಗೂ ಆಸ್ಪತ್ರೆಗಳಲ್ಲಿ ಆರೈಕೆ ಮತ್ತು ಚಿಕಿತ್ಸೆಯಲ್ಲಿದ್ದಾರೆ. 147 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ 65,563 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೆ 1.66 ಕೋಟಿ ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.