ಕುಂದಾಪುರ: ‘ಕೋವಿಡ್–19 ಬಾಧಿತರಾದರೆ ಚಿಕಿತ್ಸೆಗೆ ₹2-3 ಲಕ್ಷ ಬೇಕಂತೆ, ನಮ್ಮಲ್ಲಿ ಆಯುಷ್ಮಾನ್ ಕಾರ್ಡ್ ಕೂಡ ಇಲ್ಲ ಎನ್ನುವ ಆತಂಕಕ್ಕೆ ಒಳಗಾಗುವುದು ಬೇಡ ಸೋಂಕಿತರಲ್ಲಿ ಕನಿಷ್ಠ ಆಧಾರ್ ಕಾರ್ಡ್ ಇದ್ದರೂ ಅವರಿಗೆ ಯೋಗ್ಯ ಚಿಕಿತ್ಸೆ ನೀಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಮಂಗಳವಾರ ಇಲ್ಲಿನ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಅವರು, ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.
‘ಆಯುಷ್ಮಾನ್ ಕಾರ್ಡ್ ಹೊಂದಿರದೆ ಇದ್ದವರು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಳಲ್ಲಿ ಯಾವುದನ್ನೆ ಹೊಂದಿದ್ದರೂ ಭಯ ಪಡುವ ಅಗತ್ಯ ಇಲ್ಲ. ಕಾಯಿಲೆಯನ್ನು ಗುಣಪಡಿಸಲು ಅಗತ್ಯ ಇರುವ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದವರಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಕುರಿತು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತುಕತೆ ನಡೆಸಲಾಗಿದೆ. ಖಾಸಗಿ ಆಸ್ಪತ್ರೆಗೆ ಬರುವ ಮೊದಲು ವೆನ್ಲಾಕ್ ಆಸ್ಪತ್ರೆಗೆ ತೆರಳಿ ಶಿಫಾರಸು ಪತ್ರ ತರಬೇಕು ಎನ್ನುವ ಕುರಿತು ಇರುವ ಗೊಂದಲಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಸೋಂಕು ಪೀಡಿತರಿಗೆ ಯೋಗ್ಯ ಚಿಕಿತ್ಸೆ ನೀಡಬೇಕು ಎನ್ನುವ ಸರ್ಕಾರದ ಸಂಕಲ್ಪವನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರಲು ಮಂಗಳೂರಿನಲ್ಲಿ ಅಧಿಕಾರಿಗಳ, ಆರೋಗ್ಯ ಇಲಾಖೆ ಪ್ರಮುಖರು ಹಾಗೂ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.