ಲಖನೌ: ಕೋವಿಡ್-19 ಸಾಂಕ್ರಾಮಿಕ ರೋಗದ ಸದ್ಯದ ಪರಿಸ್ಥಿತಿಯಲ್ಲಿ, ಆಸ್ಪತ್ರೆಗಳಲ್ಲಿ ಮಾನವಶಕ್ತಿ ಹೆಚ್ಚಿಸಲು ನಿವೃತ್ತ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ಬಳಸಿಕೊಳ್ಳಬಹುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.
ಅಲ್ಲದೆ ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಕೆಲಸ ಮಾಡಬೇಕು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.
'ಕೋವಿಡ್-19 ವಿರುದ್ಧದ ಯುದ್ಧದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ ಅನೇಕರು ರೋಗಿಗಳಿಗೆ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವಶಕ್ತಿಯನ್ನು ಹೆಚ್ಚಿಸುವ ಸಲುವಾಗಿ, ನಿವೃತ್ತ ವೈದ್ಯರು, ಲ್ಯಾಬ್ ತಂತ್ರಜ್ಞರು ಮತ್ತು ಪ್ಯಾರಾ-ವೈದ್ಯಕೀಯ ಸಿಬ್ಬಂದಿ ಜೊತೆಗೆ ಸಶಸ್ತ್ರ ಪಡೆಗಳ ನಿವೃತ್ತ ಸಿಬ್ಬಂದಿಯ ಅನುಭವಗಳನ್ನು ಪಡೆಯಬಹುದು' ಎಂದು ವರ್ಚುಯಲ್ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಅವರು ಹೇಳಿದ್ದಾರೆ.
ಅಗತ್ಯವಿರುವ ಆಮ್ಲಜನಕವನ್ನು ಪೂರೈಸಲಾಗುತ್ತಿದೆ ಮತ್ತು ಆಮ್ಲಜನಕದ ಲೆಕ್ಕಪರಿಶೋಧನೆಯನ್ನು ಕೈಗೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ. ಕೋವಿಡ್-19ಗಾಗಿ ಸ್ವಾಧೀನಪಡಿಸಿಕೊಂಡಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಆಮ್ಲಜನಕದ ಮಾಹಿತಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಟೆಲಿ-ಕನ್ಸಲ್ಟೆನ್ಸಿಯನ್ನು ಸಮಗ್ರವಾಗಿ ಬಳಸಿಕೊಳ್ಳಬೇಕು. ಇದರಿಂದಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಜನರನ್ನು ಸುಲಭವಾಗಿ ಸಂಪರ್ಕಿಸಬಹುದು ಎಂದು ಆದಿತ್ಯನಾಥ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.