ADVERTISEMENT

Covid-19 Karnataka Update: ಮೃತರ ಸಂಖ್ಯೆ 12 ಸಾವಿರದತ್ತ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 15:15 IST
Last Updated 18 ಡಿಸೆಂಬರ್ 2020, 15:15 IST
ಕೋವಿಡ್‌–19 ಪರೀಕ್ಷೆಗೆ ಗಂಟಲು ಮಾದರಿ ದ್ರವ ಸಂಗ್ರಹ–ಸಾಂದರ್ಭಿಕ ಚಿತ್ರ
ಕೋವಿಡ್‌–19 ಪರೀಕ್ಷೆಗೆ ಗಂಟಲು ಮಾದರಿ ದ್ರವ ಸಂಗ್ರಹ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್ ಪೀಡಿತರಲ್ಲಿ 8 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 12 ಸಾವಿರದತ್ತ (11,989) ದಾಪುಗಾಲು ಇರಿಸಿದೆ.

ಕಳೆದ ತಿಂಗಳು ರಾಜ್ಯದಲ್ಲಿ ಕೋವಿಡ್‌ಗೆ 624 ಮಂದಿ ಮೃತಪಟ್ಟಿದ್ದರು. ಈ ತಿಂಗಳು 18 ದಿನಗಳಲ್ಲಿ 211 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಮರಣ ಪ್ರಮಾಣ ದರ ಶೇ 0.65ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ 1,222 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.07 ಲಕ್ಷ ದಾಟಿದೆ. ಈ ತಿಂಗಳು 22,226 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,234 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಒಂದೇ ದಿನ 90 ಸಾವಿರ ಆರ್‌ಟಿ–ಪಿಸಿಆರ್ ಸೇರಿದಂತೆ 1.04 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.28 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ 1,039 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.79 ಲಕ್ಷಕ್ಕೆ ತಲುಪಿದೆ. ಸದ್ಯ 15,380 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 223 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 687 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.81 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 61 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 51,666ಕ್ಕೆ ತಲುಪಿದೆ. ಹಾಸನದಲ್ಲಿ 46, ತುಮಕೂರಿನಲ್ಲಿ 43, ದಕ್ಷಿಣ ಕನ್ನಡದಲ್ಲಿ 38, ಮಂಡ್ಯದಲ್ಲಿ 29 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ 25 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.