ಬೆಂಗಳೂರು:ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಕಂಟೈನ್ಮೆಂಟ್ ವಲಯಗಳಲ್ಲಿ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಸುಮಾರು 89,368 ಮಂದಿ ಕೊರೊನಾ ಸೋಂಕಿನ ಅಪಾಯಕ್ಕೆ ಸಿಲುಕಿದ್ದಾರೆ.
ಆರೋಗ್ಯ ಇಲಾಖೆ ನಡೆಸಿರುವ ಕುಟುಂಬಗಳ ಸಮೀಕ್ಷೆಯಲ್ಲಿ ಈ ಮಾಹಿತಿ ಪತ್ತೆ ಆಗಿದೆ. ಅಷ್ಟೂ ಜನರ ಮೇಲೆ ಆರೋಗ್ಯ ಇಲಾಖೆ ನಿರಂತರ ನಿಗಾ ಇಟ್ಟಿದ್ದು, ಕೋವಿಡ್ನ ಯಾವುದೇ ಲಕ್ಷಣ ಕಂಡು ಬಂದರೂ ತ್ವರಿತಗತಿಯಲ್ಲಿ ಚಿಕಿತ್ಸೆಗೂ ಕ್ರಮ
ಗಳನ್ನು ತೆಗೆದುಕೊಂಡಿದೆ.
ಈವರೆಗೆ ನಡೆದಿರುವ ಸಮೀಕ್ಷೆಯಲ್ಲಿ 78 ಸಾವಿರಕ್ಕೂ ಅಧಿಕ ಮಂದಿ ವೃದ್ಧರನ್ನು ಗುರುತಿಸಲಾಗಿದ್ದು, ಇವರಲ್ಲಿ 27 ಸಾವಿರಕ್ಕೂ ಅಧಿಕ ಮಂದಿ ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ ಸೇರಿದಂತೆ ವಿವಿಧ ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಕೊರೊನಾ ಸೋಂಕಿಗೆ ಒಳಗಾದವರನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡುವ ಉದ್ದೇಶದಿಂದ ಕಂಟೈನ್ಮೆಂಟ್ ವಲಯಗಳಲ್ಲಿ ಪ್ರಾರಂಭಿಸಲಾಗಿರುವ ಕುಟುಂಬಗಳ ಸಮೀಕ್ಷೆ ಶೇ 32.4 ರಷ್ಟು ಪೂರ್ಣಗೊಂಡಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಗಳ ಸಂಖ್ಯೆ ಹೆಚ್ಚಳ, ಫೀವರ್ ಕ್ಲಿನಿಕ್ ಪ್ರಾರಂಭ, ಮನೆ ಆರೈಕೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಾದ್ಯಂತ ಮನೆ ಮನೆ ಆರೋಗ್ಯ ಸಮೀಕ್ಷೆ ಶೇ 95 ರಷ್ಟು ಪೂರ್ಣಗೊಂಡಿದೆ. ಕಂಟೈನ್ಮೆಂಟ್ ವಲಯದಲ್ಲಿಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಹಾಗೂ ಸೋಂಕು ಶಂಕಿತರು ಇರುವುದರಿಂದಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು, 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ ಮಕ್ಕಳನ್ನು ಪ್ರತ್ಯೇಕವಾಗಿ ವರ್ಗೀಕರಿಸಿ,ಅಪಾಯದ ವರ್ಗದವರು ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಸದ್ಯಕೋವಿಡ್ ಪ್ರಕರಣಗಳು ಪತ್ತೆಯಾದ ನಿಗದಿತ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಅಧಿಕ ಪ್ರಕರಣಗಳು ವರದಿಯಾದ ಪರಿಣಾಮ ಮನೆಯಿಂದ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಮಾತ್ರ ನಿರ್ಬಂಧಿಸಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ21 ಸಾವಿರಕ್ಕೂ ಅಧಿಕ ಕಂಟೈನ್ಮೆಂಟ್ ವಲಯಗಳನ್ನು ಗುರುತಿಸಲಾಗಿದೆ.ರಾಜ್ಯ ಸರ್ಕಾರವು ಒಟ್ಟು 9.35 ಲಕ್ಷ ಕುಟುಂಬಗಳನ್ನುಸಮೀಕ್ಷೆಗೆ ಒಳಪಡಿಸುವ ಗುರಿ ಹಾಕಿಕೊಂಡಿದೆ.
* ಕಂಟೈನ್ಮೆಂಟ್ ವಲಯಗಳು ಹೆಚ್ಚುತ್ತಿರುವುದರಿಂದ ಸಮೀಕ್ಷೆ ನಿರಂತರ ನಡೆಯಲಿದೆ. ಸೋಂಕು ಲಕ್ಷಣ ಕಾಣಿಸಿಕೊಂಡವರಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಲಾಗುವುದು
- ಡಾ. ಓಂ ಪ್ರಕಾಶ್ ಪಾಟೀಲ್ಆ, ರೋಗ್ಯ ಇಲಾಖೆ ನಿರ್ದೇಶಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.