ADVERTISEMENT

Karnataka Covid-19 Updates: ರಾಜ್ಯದಲ್ಲಿ 2,360 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 23:30 IST
Last Updated 8 ನವೆಂಬರ್ 2020, 23:30 IST
   

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 2,740 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.46 ಲಕ್ಷಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1,165 ಮಂದಿ ಸೇರಿದಂತೆ ರಾಜ್ಯದಲ್ಲಿ 2,360 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಗುಣಮುಖರ ಸಂಖ್ಯೆ 8 ಲಕ್ಷದ ಗಡಿ ದಾಟಿದೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 11 ಮಂದಿ ಸೇರಿದಂತೆ ರಾಜ್ಯದಲ್ಲಿ 22 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,391ಕ್ಕೆ ತಲುಪಿದೆ.

ಉಳಿದಂತೆ, 33,678 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 884 ಮಂದಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಒಂದೇ ದಿನ 1.17 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 87.38 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 1,579 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.49 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 135 ಪ್ರಕರಣಗಳು ಪತ್ತೆಯಾಗಿವೆ.

ವರದಿ ಬಿಡುಗಡೆ ವಿಳಂಬ: ಕೋವಿಡ್‌ಗೆ ಸಂಬಂಧಿಸಿದ ದೈನಂದಿನ ಮಾಧ್ಯಮ ವರದಿಯನ್ನು ಆರೋಗ್ಯ ಇಲಾಖೆಯು ಭಾನುವಾರ ತಡರಾತ್ರಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 10 ಸಾವಿರದ ಗಡಿ ದಾಟಿದಾಗಲೂ ನಿಗದಿತ ಸಮಯದೊಳಗೆ ಇಲಾಖೆಯು ಪ್ರಕಟಣೆಯನ್ನು ಬಿಡುಗಡೆ ಮಾಡಿತ್ತು. ಪ್ರಕರಣಗಳ ಸಂಖ್ಯೆ ಇಳಿಕೆ ಕಂಡರೂ ಶನಿವಾರ ರಾತ್ರಿ 9.20ಕ್ಕೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಇಲಾಖೆ, ಇದೇ ಮೊದಲ ಬಾರಿ ಕೋವಿಡ್‌ಗೆ ಸಂಬಂಧಿಸಿದ ದೈನಂದಿನ ಮಾಹಿತಿಯನ್ನು ರಾತ್ರಿ 12 ಗಂಟೆಗೆ ನೀಡಿದೆ.

‘ತಾಂತ್ರಿಕ ಕಾರಣದಿಂದ ಮಿಡಿಯಾ ಬುಲೆಟಿನ್ ಬಿಡುಗಡೆ ವಿಳಂಬವಾಯಿತು’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.