ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 771 ಮಂದಿ ಸೇರಿದಂತೆ ರಾಜ್ಯದಲ್ಲಿ 2,198 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.20 ಲಕ್ಷಕ್ಕೆ ತಲುಪಿದೆ.
ಒಂದು ತಿಂಗಳಿಂದ ಹೊಸ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗಿದ್ದು, ಈ ಅವಧಿಯಲ್ಲಿ ಚೇತರಿಸಿಕೊಳ್ಳುವವರ ಸಂಖ್ಯೆಯು ಏರಿಕೆ ಕಂಡಿದೆ. ಪರಿಣಾಮ ಸೋಂಕಿತರು ಹಾಗೂ ಗುಣಮುಖರ ನಡುವಿನ ಅಂತರ ಕಡಿಮೆಯಾಗಿದ್ದು, ಚೇತರಿಕೆಯ ಪ್ರಮಾಣ ಶೇ 95.4ಕ್ಕೆ ಏರಿಕೆಯಾಗಿದೆ. ಶನಿವಾರ 2,154 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.60 ಲಕ್ಷಕ್ಕೆ ಏರಿಕೆಯಾಗಿದೆ. ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ ಶೇ 98.1ರಷ್ಟು ಮಂದಿಗೆ ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಕಾಣಿಸಿಕೊಂಡಿಲ್ಲ.
ಈ ತಿಂಗಳ 14 ದಿನಗಳ ಅವಧಿಯಲ್ಲಿ 36,670 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,619 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ 17 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,508ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 27,965ಕ್ಕೆ ಇಳಿಕೆಯಾಗಿದ್ದು, ಇದರಲ್ಲಿ 773 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಒಂದೇ ದಿನ 1.15 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 93.92 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 1,195 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.56 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 137 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49,413ಕ್ಕೆ ತಲುಪಿದೆ. ಹಾಸನ (103), ತುಮಕೂರು (61) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.