ADVERTISEMENT

ಜೆಡಿಎಸ್‌ ಶಾಸಕರಿಗೆ ಯಡಿಯೂರಪ್ಪ ಸಹಕಾರ: ಸಚಿವ ಸಿ.ಪಿ.ಯೋಗೇಶ್ವರ್‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 14:32 IST
Last Updated 8 ಜುಲೈ 2021, 14:32 IST
ಸಚಿವ ಸಿ.ಪಿ.ಯೋಗೇಶ್ವರ್‌
ಸಚಿವ ಸಿ.ಪಿ.ಯೋಗೇಶ್ವರ್‌   

ಬೆಂಗಳೂರು: ‘ಜೆಡಿಎಸ್‌ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಶ್ರೀರಕ್ಷೆ ಇದೆ. ಹೀಗಾಗಿ ಅವರ‍್ಯಾರೂ ಪಕ್ಷ ತ್ಯಜಿಸಿಲ್ಲ. ಅವರನ್ನು ಉಳಿಸಿಕೊಳ್ಳಲು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ. ಈ ಉದ್ದೇಶದಿಂದಲೇ ಪದೇ ಪದೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡುತ್ತಿದ್ದಾರೆ. ಅವರು ರಾಜಕೀಯವಾಗಿ ದುರ್ಬಲವಾಗುತ್ತಿರುವುದಕ್ಕೆ ಇದು ಸಾಕ್ಷಿ’ ಎಂದು ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ ‘ಮಂಡ್ಯ, ರಾಮನಗರ ಬಿಟ್ಟರೆ ಜೆಡಿಎಸ್‌ಗೆ ಎಲ್ಲೂ ನೆಲೆ ಇಲ್ಲ. ಅವರು ಉತ್ತರ ಕರ್ನಾಟಕಕ್ಕೆ ಹೋಗಿ ಪಕ್ಷ ಕಟ್ಟಲಿ ನೋಡೋಣ’ ಎಂದು ಸವಾಲು ಹಾಕಿದರು.

‘ಸುಮಲತಾ ಅವರು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಮಗನನ್ನು ಸೋಲಿಸಿದ್ದರು. ಹೀಗಾಗಿಯೇ ಸುಮಲತಾ ಅವರನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳನ್ನು ಬಳಸಿದ್ದು ಸರಿಯಲ್ಲ. ಇದು ಅವರಿಗೆ ಶೋಭೆ ತರುವುದಿಲ್ಲ‘ ಎಂದರು.

ADVERTISEMENT

‘ಚನ್ನಪಟ್ಟಣ ನನ್ನ ಜನ್ಮಭೂಮಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕಿಳಿಯುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹಾಗೂ ಸರ್ಕಾರದೊಳಗಿನ ಲೋಪದೋಷ ಹಾಗೂ ವೈಯಕ್ತಿಕ ನೋವುಗಳ ಬಗ್ಗೆ ಆಯಾ ಸಂದರ್ಭಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದೇನೆ’ ಎಂದು ತಿಳಿಸಿದರು.

‘ಎಂ.ಪಿ.ರೇಣುಕಾಚಾರ್ಯ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಲು, ಅವರು ಪ್ರತಿನಿಧಿಸುವ ಹೊನ್ನಾಳಿ ಕ್ಷೇತ್ರಕ್ಕೆ ₹1,000 ಕೋಟಿ ಅನುದಾನ ಸಿಗಲು ನನ್ನ ಶ್ರಮವೂ ಇದೆ. ಅದನ್ನು ಮರೆಯಬಾರದು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ವಿಧಾನಸಭೆಗೆ ಆಯ್ಕೆಯಾಗಿ ಬನ್ನಿ ಎಂದು ಅವರು ಸವಾಲು ಹಾಕಿದ್ದಾರೆ. ನಾನು ಸಚಿವನಾಗಿದ್ದಾಗಲೇ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಿದ್ದೇನೆ. ನನ್ನ ಬಗ್ಗೆ 40 ಶಾಸಕರು ಹೈಕಮಾಂಡ್‌ಗೆ ದೂರು ನೀಡಿರುವ ಕುರಿತು ತಿಳಿದಿಲ್ಲ. ವರಿಷ್ಠರಿಗೆ ಏನು ಹೇಳಬೇಕೊ ಅದನ್ನು ಹೇಳಿಯಾಗಿದೆ. ಮುಂದೆ ಫಲಿತಾಂಶ ಪ್ರಕಟವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.