
ಅಮಿತ್ ಶಾ, ಕೇಂದ್ರ ಗೃಹಸಚಿವ & ಸಿದ್ದರಾಮಯ್ಯ, ಮುಖ್ಯಮಂತ್ರಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಸಂಜೆ 5.30ಕ್ಕೆ ಭೇಟಿ ಮಾಡಿ ಬೆಳೆಹಾನಿಗೆ ಪರಿಹಾರ ನೀಡುವಂತೆ ಬೇಡಿಕೆ ಮುಂದಿಡಲಿದೆ.
ಈ ಬಾರಿಯ ನೈರುತ್ಯ ಮುಂಗಾರು ವೇಳೆ ಮಳೆ ಮತ್ತು ಪ್ರವಾಹದಿಂದಾಗಿ ಮೂಲಸೌಕರ್ಯಕ್ಕೆ ಭಾರಿ ಪ್ರಮಾಣದ ಹಾನಿಯಾಗಿದ್ದು, ಅವುಗಳ ಪುನರ್ ನಿರ್ಮಾಣಕ್ಕಾಗಿ ಕೇಂದ್ರದಿಂದ ₹1,545 ಕೋಟಿ ಆರ್ಥಿಕ ನೆರವು ಕೇಳಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮಹದಾಯಿ, ಮೇಕೆದಾಟು ಸೇರಿದಂತೆ ವಿವಿಧ ಜಲ ಯೋಜನೆಗಳಿಗೆ ಕೇಂದ್ರದಿಂದ ತ್ವರಿತಗತಿಯಲ್ಲಿ ಅನುಮೋದನೆ ನೀಡುವಂತೆ ಸಿದ್ದರಾಮಯ್ಯ ಕೋರಲಿದ್ದಾರೆ.
ರಾಜ್ಯದ ಬೇಡಿಕೆಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಿದ್ದರಾಮಯ್ಯ ಕಾಲಾವಕಾಶ ಕೋರಿದ್ದಾರೆ. ಪ್ರಧಾನಿ ಅವರನ್ನು ಸೋಮವಾರ ಭೇಟಿ ಮಾಡುವ ಸಾಧ್ಯತೆ ಇದೆ. ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶನಿವಾರ ರಾತ್ರಿ ಬೆಂಗಳೂರಿಗೆ ಮರಳಲಿರುವ ಅವರು ಸೋಮವಾರ ಮತ್ತೆ ದೆಹಲಿಗೆ ಬರುವ ಸಂಭವ ಇದೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ಪುನರ್ ರಚನೆ ಮತ್ತಿತರ ವಿಷಯಗಳ ಕುರಿತು ಹೈಕಮಾಂಡ್ ನಾಯಕರನ್ನು ಕಾಣುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.