ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಬೇಕು ಅಥವಾ ಈಗ ಇರುವ ಸ್ಥಳೀಯ ಆಡಳಿತವನ್ನೇ ಮುಂದಿನ ಚುನಾವಣೆವರೆಗೂ ಮುಂದುವರೆಸಬೇಕು ಎಂದು ರಾಜ್ಯ ಸರ್ಕಾರವನ್ನು ಗ್ರಾಮ ಪಂಚಾಯಿತಿ ಹಕ್ಕೊತ್ತಾಯ ಆಂದೋಲನ ಒತ್ತಾಯಿಸಿದೆ.
ಕೊರೊನಾ ಕಾರಣದಿಂದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಿಲ್ಲ. ಅಲ್ಲದೆ, ಇನ್ನೂ ಆರು ತಿಂಗಳು ಮುಂದೂಡುವ ಅನಿವಾರ್ಯತೆಯೂ ಇದೆ. ಚುನಾವಣೆ ನಡೆಸಲು ಸಾಧ್ಯವಾಗದಿದ್ದರೆ ಅಥವಾ ಮುಂದೂಡಿದರೆ ಆಡಳಿತಾಧಿಕಾರಿ ನೇಮಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ಈಗಿನ ವಿಕೋಪ ಸ್ಥಿತಿಯಲ್ಲಿ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಿರುವ ಗ್ರಾಮ ಪಂಚಾಯಿತಿ ಆಡಳಿತ ಪಕ್ಷಾತಾತೀತವಾಗಿ ಮತ್ತು ಬದ್ಧತೆಯಿಂದ ಕೆಲಸ ಮಾಡಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಉತ್ತರದಾಯಿಯಾಗಿ ಕೆಲಸ ಮಾಡಿದೆ. ಹೀಗಾಗಿ, ಆಡಳಿತಾಧಿಕಾರಿ ನೇಮಿಸುವಬದಲು, ಸ್ಥಳೀಯ ಸರ್ಕಾರವನ್ನೇ ಮಧ್ಯಂತರ ಸ್ಥಳೀಯ ಸ್ವಯಂ ಸರ್ಕಾರವಾಗಿ (ಸ್ಥಳೀಯಾಡಳಿತ ಸಮಿತಿ) ಮುಂದು ವರಿಸಬೇಕು ಎಂದೂ ಆಗ್ರಹಿಸಿದೆ.
ಈ ಬಗ್ಗೆ ರಾಜ್ಯದ 20 ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ನಿರ್ಣಯ ಕೈಗೊಂಡುಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವರಿಗೆ ಹಕ್ಕೊತ್ತಾಯ ಸಲ್ಲಿಸಲಾಗಿದೆ ಎಂದೂ ಆದೋಲನದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.